ಸಾಮಾಜಿಕ ನ್ಯಾಯದಡಿ ಆಡಳಿತ ನಡೆಸುವ ಕಾಂಗ್ರೆಸ್ : ಸಿಎಂ ಸಿದ್ದರಾಮಯ್ಯ
ಪಿರಿಯಾಪಟ್ಟಣ: ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಸಿಎಂ

ಪಿರಿಯಾಪಟ್ಟಣ, ಮಾ.9: ಕಾಂಗ್ರೆಸ್ ಸಾಮಾಜಿಕ ನ್ಯಾಯದಡಿ ಆಡಳಿತ ನಡೆಸುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ವರಿಷ್ಠರು ರಾಜಕೀಯವಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ನೀವು ನನ್ನ ಕೈ ಹಿಡಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಶುಕ್ರವಾರ ತಾಲೂಕಿನ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದಡಿ ಆಡಳಿತ ನಡೆಸುತ್ತಿದ್ದು, ಪ್ರತೀ ಸಮುದಾಯಕ್ಕೂ ಕೂಡ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಆದರೆ, ಇದನ್ನು ಸಹಿಸದ ಇತರ ಪಕ್ಷಗಳು ಟೀಕಿಸುವುದರ ಮೂಲಕ ತಮ್ಮ ಅಸೂಯೆ ವ್ಯಕ್ತಪಡಿಸುತ್ತಿವೆ ಎಂದರು.
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷವು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇವರು ಇಲ್ಲಸಲ್ಲದ ಆಸೆ, ಆಮಿಷಗಳನ್ನು ತೋರಿಸಿ ಮತದಾರರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಾರೆ. ಯಾವುದೇ ಕಾರಣಕ್ಕೂ ಮತದಾರರು ಇದಕ್ಕೆ ಬಲಿಯಾಗಬಾರದು. ಮುಂದಿನ ದಿನಗಳಲ್ಲಿಯೂ ಕಾಂಗ್ರೆಸ್ ಸರಕಾರವೇ ಅಧಿಕಾರಕ್ಕೆ ಬರುತ್ತದೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ರಾಜ್ಯಕ್ಕೆ ಆಗಮಿಸಿ ಕಾಂಗ್ರೆಸ್ ಭ್ರಷ್ಟಾಚಾರದ ಸರಕಾರ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಆದರೆ, ಚೆಕ್ ಮೂಲಕ ಲಂಚ ಸ್ವೀಕರಿಸಿ ಜೈಲಿಗೆ ಹೋದ ಯಡಿಯೂರಪ್ಪ ಅವರನ್ನು ಪಕ್ಕದಲ್ಲಿಯೇ ಕೂರಿಸಿಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಯಾವುದೇ ಭ್ರಷ್ಟಾಚಾರ ಮಾಡದೆ ಶುದ್ಧ ಹಸ್ತವಾಗಿ ಸರಕಾರ ನಡೆಸಿದೆ. ಜೆಡಿಎಸ್ ಪಕ್ಷವು ನನಗೆ ಉಪ ಮುಖ್ಯಮಂತ್ರಿ ಸ್ಥಾನದಿಂದ ವಂಚನೆ ಮಾಡಿತು. ಈ ಕಾರಣಕ್ಕಾಗಿಯೇ ನಾನು ಅಹಿಂದ ಸಂಘಟನೆಯನ್ನು ಮಾಡಿ ನಂತರ ಕಾಂಗ್ರೆಸ್ ಪಕ್ಷದಲ್ಲಿ ಗೆದ್ದು ಇಂದು ಮುಖ್ಯಮಂತ್ರಿ ಆಗಿದ್ದೇನೆ. ಇದನ್ನು ಸಹಿಸದ ವ್ಯಕ್ತಿಗಳು ಅಸೂಯೆ ವ್ಯಕ್ತಪಡಿಸುತ್ತಿದ್ದು, ಇದಕ್ಕೆ ಯಾರೂ ತಲೆಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿ, ಕಳೆದ ಹಲವು ವರ್ಷಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯವನ್ನಾಳಿವೆ. ಆದರೆ, ಇವೆಲ್ಲವೂ ಸಾಮಾಜಿಕ ನ್ಯಾಯ ಒದಗಿಸಿ ಕೊಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ಪಕ್ಷವು ಅಂಬೇಡ್ಕರ್, ಬಸವಣ್ಣರಂತಹಾ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ ರಾಜ್ಯಾದ್ಯಂತ ಕಾಂಗ್ರೆಸ್ ಅಲೆ ಎದ್ದಿದ್ದು, ಪ್ರತಿಯೊಬ್ಬರೂ ಕೆ. ವೆಂಕಟೇಶ್ಗೆ ಮತ ನೀಡಿ ಇವರನ್ನು ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.
ಶಾಸಕ ಕೆ. ವೆಂಕಟೇಶ್ ಮಾತನಾಡಿದರು. ಇದೇ ಸಂದರ್ಭದಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕರಾದ ಸತೀಶ್ ಜಾರಕಿಹೊಳಿ, ಎಚ್.ಪಿ. ಮಂಜುನಾಥ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಸಚಿವ ಸಿ.ಎಚ್. ವಿಜಯ ಶಂಕರ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದಕುಮಾರ್, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಭಾರತೀ ಶಂಕರ್, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಆಶ್ರಯ ಸಮಿತಿ ಸದಸ್ಯ ಸುನಿಲ್ ಬೋಸ್, ಜಿ.ಪಂ. ಸದಸ್ಯರಾದ ಮಣಿ ಸ್ವಾಮಿ, ಡಾ. ಪುಷ್ಪಾ ಅಮರನಾಥ್, ಅನಿಲ್ ಚಿಕ್ಕಮಾದು, ತಾ.ಪಂ. ಅಧ್ಯಕ್ಷೆ ನಿರೂಪಾ ರಾಜೇಶ್, ಸದಸ್ಯ ಮಾನು ಇನಾಯತ್, ಪುರಸಭೆ ಉಪಾಧ್ಯಕ್ಷೆ ರತ್ನಾ, ಸದಸ್ಯ ಅಝೀಝ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಸದಸ್ಯ ಪ್ರಶಾಂತ್ ಗೌಡ, ಜಿಲ್ಲಾಧಿಕಾರಿ ಡಿ. ರಂದೀಪ್, ಜಿಲ್ಲಾ ಆಹಾರ ಸಹಾಯಕ ನಿರ್ದೇಶಕ ಡಾ.ಕಾ. ರಾಮೇಶ್ವರಪ್ಪ, ತಹಸೀಲ್ದಾರ್ ಜೆ. ಮಹೇಶ್, ಎಇಇ ಪ್ರಕಾಶ್ ಮತ್ತು ಬಸವರಾಜ್ ಇನ್ನಿತರರು ಉಪಸ್ಥಿತರಿದ್ದರು.
ಜೆಡಿಎಸ್ ಪಕ್ಷವು ನನಗೆ ಉಪ ಮುಖ್ಯಮಂತ್ರಿ ಸ್ಥಾನದಿಂದ ವಂಚನೆ ಮಾಡಿತು. ಈ ಕಾರಣಕ್ಕಾಗಿಯೇ ನಾನು ಅಹಿಂದ ಸಂಘಟನೆಯನ್ನು ಮಾಡಿ ನಂತರ ಕಾಂಗ್ರೆಸ್ ಪಕ್ಷದಲ್ಲಿ ಗೆದ್ದು ಇಂದು ಮುಖ್ಯಮಂತ್ರಿ ಆಗಿದ್ದೇನೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾ, ಚೆಕ್ ಮೂಲಕ ಲಂಚ ಸ್ವೀಕರಿಸಿ ಜೈಲಿಗೆ ಹೋದ ಯಡಿಯೂರಪ್ಪ ಅವರನ್ನು ಪಕ್ಕದಲ್ಲಿಯೇ ಕೂರಿಸಿಕೊಂಡು ಕಾಂಗ್ರೆಸ್ ಭ್ರಷ್ಟ ಸರಕಾರ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ.







