ಮತಗಟ್ಟೆಗಳಿಗೆ ಮೂಲಸೌಕರ್ಯ ಒದಗಿಸುವ ಕೆಲಸ ಶೀಘ್ರ ಪೂರ್ಣಗೊಳಿಸಿ: ಚಾ.ನಗರ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ
![ಮತಗಟ್ಟೆಗಳಿಗೆ ಮೂಲಸೌಕರ್ಯ ಒದಗಿಸುವ ಕೆಲಸ ಶೀಘ್ರ ಪೂರ್ಣಗೊಳಿಸಿ: ಚಾ.ನಗರ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮತಗಟ್ಟೆಗಳಿಗೆ ಮೂಲಸೌಕರ್ಯ ಒದಗಿಸುವ ಕೆಲಸ ಶೀಘ್ರ ಪೂರ್ಣಗೊಳಿಸಿ: ಚಾ.ನಗರ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ](/images/placeholder.jpg)
ಚಾಮರಾಜನಗರ, ಮಾ. 15 : ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳೆಂದು ಗುರುತಿಸಿರುವ ಕಟ್ಟಡಗಳಲ್ಲಿ ಮೂಲಸೌಕರ್ಯ ಒದಗಿಸುವ ಕೆಲಸವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಚುನಾವಣಾ ಪೂರ್ವಸಿದ್ಧತೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿಕಲಚೇತನರು, ಅಶಕ್ತರು ಪ್ರವೇಶಿಸಲು ಅನುಕೂಲವಾಗುವಂತೆ ರ್ಯಾಂಪ್ ವ್ಯವಸ್ಥೆ ಮಾಡಬೇಕು. ಈ ಹಿಂದೆ ಯಾವ ಮತಗಟ್ಟೆ ಕಟ್ಟಡಗಳಲ್ಲಿ ಸೌಲಭ್ಯ ಇದೆ ? ಯಾವ ಕಟ್ಟಡಗಳಲ್ಲಿ ಇಲ್ಲ ಎಂಬ ಬಗ್ಗೆ ಪಟ್ಟಿ ಮಾಡಿ ಮೂಲಸೌಕರ್ಯ ಕಲ್ಪಿಸಲು ಸೂಚಿಸಲಾಗಿತ್ತು. ಆ ಪ್ರಕಾರ ಶೌಚಾಲಯ, ರ್ಯಾಂಪ್ ನಿರ್ಮಾಣ ಮಾಡಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಈ ಬಗ್ಗೆ ವೀಕ್ಷಿಸಿ ದೃಢೀಕರಿಸಬೇಕು ಎಂದರು.
ಸೆಕ್ಟರ್ ಅಧಿಕಾರಿಗಳ ಪಾತ್ರ ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯಂತ ಮುಖ್ಯವಾಗಿದೆ. ಚೆಕ್ಪೋಸ್ಟ್ ಸ್ಥಾಪನೆ, ಮತಗಟ್ಟೆಗಳಿಗೆ ಮೂಲಸೌಕರ್ಯ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಚುನಾವಣೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸೂಚಿಸಲಾಗಿರುವ ಕರ್ತವ್ಯ ವ್ಯಾಪ್ತಿ ಸ್ಥಳದಲ್ಲಿ ವ್ಯಾಪಕ ಪ್ರವಾಸ ಕೈಗೊಂಡು ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚುನಾವಣೆ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು. ಇಡೀ ತಂಡವಾಗಿ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸಿದರೆ ಯಶಸ್ವಿಯಾಗಲು ಸಾಧ್ಯವಾಗಲಿದೆ. ಹೀಗಾಗಿ ಪ್ರತಿಯೊಬ್ಬರೂ ನಿಯೋಜಿಸಿದ ಕರ್ತವ್ಯವನ್ನು ಯಾವುದೇ ಲೋಪವಿಲ್ಲದೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕಾವೇರಿ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾತನಾಡಿ ಈ ಹಿಂದೆ ನಡೆದ ಚುನಾವಣೆ ಸಂದರ್ಭದಲ್ಲಿ ಅಂತರರಾಜ್ಯ ಹಾಗೂ ಅಂತರ ಜಿಲ್ಲೆ ಚೆಕ್ ಪೋಸ್ಟ್ಗಳನ್ನು ತೆರೆದಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿಯೂ ಎಲ್ಲಿ ಚೆಕ್ ಪೋಸ್ಟ್ಗಳು ಅಗತ್ಯವಿದೆ ಎಂಬ ಬಗ್ಗೆ ಈಗಾಗಲೇ ಕೆಲವು ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸೆಕ್ಟರ್, ಸ್ಥಳೀಯ ಪೊಲೀಸ್ ಅಧಿಕಾರಿಗಳು, ತಹಸೀಲ್ದಾರರು ಮತ್ತೊಮ್ಮೆ ವಿವರವಾಗಿ ಚರ್ಚಿಸಿ ಚೆಕ್ ಪೋಸ್ಟ್ ಸ್ಥಾಪನೆ ಸ್ಥಳಗಳನ್ನು ಶೀಘ್ರವಾಗಿ ಗುರುತಿಸಿ ತಮಗೆ ವರದಿ ನೀಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರು ಮಾತನಾಡಿ ಚುನಾವಣೆ ಸಿದ್ಧತೆ ಸಂಬಂಧ ನೀಡಲಾಗುವ ಮಾರ್ಗದರ್ಶನ, ಸೂಚನೆ ಅನುಸಾರ ವರದಿಯನ್ನು ತುರ್ತಾಗಿ ಸಲ್ಲಿಸಬೇಕು. ಯಾವುದೇ ಗೊಂದಲಗಳಿದ್ದರೂ ನೇರವಾಗಿ ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು. ಕಾಲಕಾಲಕ್ಕೆ ಕೇಳಲಾಗುವ ಮಾಹಿತಿಯನ್ನು ವಿಳಂಬ ಮಾಡದೆ ನೀಡಬೇಕು ಎಂದರು.
ಉಪವಿಭಾಗಾಧಿಕಾರಿ ಫೌಜಿಯಾ ತರನಂ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಪೊಲೀಸ್, ಅಬಕಾರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.