ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಪ್ರಧಾನಿ ಮೋದಿಗೆ ಇಲ್ಲ: ರಾಹುಲ್ ಗಾಂಧಿ
![ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಪ್ರಧಾನಿ ಮೋದಿಗೆ ಇಲ್ಲ: ರಾಹುಲ್ ಗಾಂಧಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಪ್ರಧಾನಿ ಮೋದಿಗೆ ಇಲ್ಲ: ರಾಹುಲ್ ಗಾಂಧಿ](https://www.varthabharati.in/sites/default/files/images/articles/2018/03/21/IMG-20180321-WA0053.jpg)
ಬೇಲೂರು,ಮಾ.21: ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದರು .
ಚಿಕ್ಕಮಗಳೂರಿನಿಂದ ಹಾಸನಕ್ಕೆ ತೆರಳುವ ಮಾರ್ಗ ಮಧ್ಯೆ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ಹಾಕಿದ್ದ ವೇದಿಕೆಯಲ್ಲಿ ಮಾತನಾಡಿದ ಅವರು ಮಾತೆತ್ತಿದರೆ ಮೋದಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರದೇ ಸಂಪುಟದಲ್ಲಿ ನಾಲ್ಕು ಮಂದಿ ಸಚಿವರು ಭ್ರಷ್ಟಾಚಾರದ ಆರೋಪಕ್ಕೆ ಸಿಲುಕಿದ್ದಾರೆ. ಅಲ್ಲದೆ ಮಾಜಿ ಮುಖ್ಯಮಂತ್ರಿಯೊಬ್ಬರು ಜೈಲುವಾಸ ಅನುಭವಿಸಿ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು .
ಭಾರತ ದೇಶದ ಪ್ರತಿಯೊಬ್ಬ ಬಡ ರೈತರ ಬಡ ಜನತೆಯ ಕೂಲಿ ಕಾರ್ಮಿಕರ ಅಕೌಂಟ್ ಗೆ ಐದು ಲಕ್ಷ ರೂಗಳನ್ನು ಹಾಕುತ್ತೇನೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಪ್ರಧಾನ ಮಂತ್ರಿ ಮೋದಿಯವರು ಇದುವರೆಗೂ ನಯಾ ಪೈಸೆ ಕೂಡ ಖಾತೆಗೆ ಹಾಕದೆ ಹಿಂದೂಸ್ತಾನದ ಜನತೆಯ ಕಿವಿಗೆ ಹೂವು ಮುಡಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿಯಾಗಿದ್ದು, ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಯನ್ನು ಬಾರಿಸಿ ಮತ್ತೆ ಕಾಂಗ್ರೆಸ್ ಅಧಿಕಾರವನ್ನು ಹಿಡಿಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು .
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿ ಕೆಪಿಸಿಸಿ, ಅಧ್ಯಕ್ಷ ಪರಮೇಶ್, ಚುನಾವಣಾ ಉಸ್ತುವಾರಿ ವೇಣುಗೋಪಾಲ್, ಶಾಸಕ ವೈಎನ್ ರುದ್ರೇಶ್ ಗೌಡ, ಸೇರಿದಂತೆ ಪ್ರಮುಖ ರಾಜಕೀಯ ಗಣ್ಯರು ಉಪಸ್ಥಿತರಿದ್ದರು .