ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯರಿಂದ ರಾಹುಲ್ ಗಾಂಧಿಗೆ ಸ್ವಾಗತ
![ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯರಿಂದ ರಾಹುಲ್ ಗಾಂಧಿಗೆ ಸ್ವಾಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯರಿಂದ ರಾಹುಲ್ ಗಾಂಧಿಗೆ ಸ್ವಾಗತ](/images/placeholder.jpg)
ಮಂಡ್ಯ,ಮಾ.25: ಪಾಂಡವಪುರ ರೈಲ್ವೆ ನಿಲ್ದಾಣದ ಬಳಿ ಎಐಸಿಸಿ ಆಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ, ಕೆ.ಟಿ.ಗೋವಿಂದೇಗೌಡ, ಇತರ ರೈತಸಂಘದ ಮುಖಂಡರು ಸ್ವಾಗತಿಸಿ, ಮನವಿ ಸಲ್ಲಿಸಿದರು.
ಈ ವೇಳೆ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದರ್ಶನ್ ಪುಟ್ಟಣ್ಣಯ್ಯ ಹೂವಿನ ಹಾರ ಹಾಕಿದರೆ, ರಾಹುಲ್ ಗಾಂಧಿ ದರ್ಶನ್ಗೆ ಹಾರ ಹಾಕುವ ಮೂಲಕ ಶುಭ ಹಾರೈಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕ್ಗಳ ರೈತರ ಸಾಲಮನ್ನಾ, ಡಾ.ಸ್ವಾಮಿನಾಥನ್ ವರದಿ ಜಾರಿ, ಕೃಷಿ ಉತ್ಪನ್ನಗಳ ಬೆಲೆ ಆಯೋಗ, ಇತರ ಬೇಡಿಕೆಗಳ ಮನವಿಯನ್ನು ದರ್ಶನ್ ರಾಹುಲ್ಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಕೆ.ಎಸ್.ಪುಟ್ಟಣ್ಣಯ್ಯ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಗೆಲ್ಲಿಸಿಕೊಂಡು ಬರುವಂತೆ ರೈತಸಂಘದ ಕಾರ್ಯಕರ್ತರಿಗೆ ಕರೆ ನೀಡಿದರು.
ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ರೈತಸಂಘದ ಬೆನ್ನಿಗೆ ಇರುತ್ತದೆ ಎಂದು ಭರವಸೆಯ ಮಾತುಗಳನ್ನಾಡುವ ಮೂಲಕ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂಬ ಸೂಚನೆಯನ್ನು ಅವರು ರವಾನಿಸಿದರು.
ದರ್ಶನ್ ಪುಟ್ಟಣ್ಣಯ್ಯಗೆ ರಾಹುಲ್ ಆಹ್ವಾನ:
ರೋಡ್ ಶೋ ವೇಳೆ ಸುಮಾರು 5 ನಿಮಿಷಗಳ ಕಾಲ ದರ್ಶನ್ ಪುಟ್ಟಣ್ಣಯ್ಯ ಅವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದೆಹಲಿಗೆ ಬಂದು ಭೇಟಿ ಮಾಡುವಂತೆ ದರ್ಶನ್ಗೆ ಹೇಳಿದರು.
ರಾಹುಲ್ ಗಾಂಧಿ ತಮ್ಮನ್ನು ಭೇಟಿಯಾಗಲು ಹೇಳಿದ್ದು, ರೈತಸಂಘದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು ಎಂದು ದರ್ಶನ್ ಪುಟ್ಟಣ್ಣಯ್ಯ ಸುದ್ದಿಗಾರರಿಗೆ ತಿಳಿಸಿದರು.