ಉಡುಪಿ ಜಿಲ್ಲೆಯಲ್ಲೂ ಚುನಾವಣಾ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

ಉಡುಪಿ, ಮಾ.27: ದೇಶಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕ ವಿಧಾನಸಭಾ ಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಮುಂದಿನ ಮೇ 12ರಂದು ಹಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ತಕ್ಷಣ ದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಿಸಿದ್ದಾರೆ.
ಮಂಗಳವಾರ ಅಪರಾಹ್ನ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಎ.17ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭಗೊಳ್ಳಲಿದ್ದು, ಎ.24 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. 25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಎ.27ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 12ರ ಶನಿವಾರದಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 15ರ ಮಂಗಳವಾರ ಮತಗಳ ಎಣಿಕೆ ಕಾರ್ಯ ನಡೆುಲಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಜಿಲ್ಲೆಯಲ್ಲಿ ಫೆ.28ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದು, ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 9,78,503 ಮತದಾರರಿದ್ದಾರೆ. ಇವರಲ್ಲಿ 4,70,730 ಮಂದಿ ಪುರುಷ ಮತದಾರರಾದರೆ, 5,07,754 ಮಹಿಳಾ ಮತದಾರರು. ಇತರರು (ತೃತೀಯ ಲಿಂಗಿಗಳು) 19 ಮಂದಿ ಇದ್ದರೆ, ಈ ಬಾರಿ 8,054ಮಂದಿ ವಿವಿಧ ರೀತಿಯ ಅಂಗವಿಕಲ ಮತದಾರರನ್ನು ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ಸದ್ಯಕ್ಕೆ ಒಟ್ಟು 1078 ಮತಗಟ್ಟೆಗಳನ್ನು ತೆರೆದಿದ್ದು, 24 ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವ ಕುರಿತಂತೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೇ ಹೆಚ್ಚುವರಿ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಈಗಿರುವ ಮತಗಟ್ಟೆಗಳಲ್ಲೇ 25 ಅಕ್ಸಿಲರಿ ಮತಗಟ್ಟೆಗಳನ್ನು ಸ್ಥಾಪಿಸಲು ಮುಖ್ಯ ಚುನಾವಣಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ಹಾಗೂ ಬದಲಾವಣೆ ಮಾಡಲು ಇನ್ನೂ ಅವಕಾಶವಿದೆ. ನಾಮಪತ್ರ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನದವರೆಗೆ ಈ ಅವಕಾಶವಿದ್ದು, ಇನ್ನೂ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಾಗದವರು ಇದರ ಪ್ರಯೋಜನ ಪಡೆದುಕೊಳ್ಳ ಬಹುದು ಎಂದು ಪ್ರಿಯಾಂಕ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ಹಾಗೂ ಬದಲಾವಣೆ ಮಾಡಲು ಇನ್ನೂ ಅವಕಾಶವಿದೆ. ನಾಮಪತ್ರ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನದವರೆಗೆ ಈ ಅವಕಾಶವಿದ್ದು, ಇನ್ನೂ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಾಗದವರು ಇದರ ಪ್ರಯೋಜನ ಪಡೆದುಕೊಳ್ಳ ಬಹುದು ಎಂದು ಪ್ರಿಯಾಂಕ ತಿಳಿಸಿದರು. ಈ ಬಾರಿಯ ಚುನಾವಣೆಯಲ್ಲಿ ವಿಕಲಚೇತನರು, ಗರ್ಭಿಣಿಯರು ಮತ್ತು ರೋಗಿಗಳಿಗೆ ಮತದಾನ ಮಾಡಲು ವಿಶೇಷ ಸೌಲಭ್ಯ ಕಲ್ಪಿಸಲಾಗಿದ್ದು, ಅವರಿಗೆ ಪ್ರತ್ಯೇಕ ಪಾಸ್ ನೀಡಲಾಗುವುದು. ಮತಗಟ್ಟೆಯಲ್ಲಿ ಅವರಿಗೆ ಆದ್ಯತೆಯ ಮೇಲೆ ಮತ ಚಲಾಯಿಸಲು ಅವಕಾಶ ನೀಡಲಾಗುವುದು. ಅಗತ್ಯವಿರುವ ಕಡೆಗಳಲ್ಲಿ ವೀಲ್ಚೇರ್ ಹಾಗೂ ರ್ಯಾಂಪ್ ಸೌಲಭ್ಯ ಒದಗಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಈ ಬಾರಿ 8054 ಮಂದಿ ವಿಕಲಚೇತನ ಮತದಾರರನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಇವಿಎಂ-ವಿವಿಪ್ಯಾಟ್: ಈ ಬಾರಿಯ ಚುನಾವಣೆಯಲ್ಲಿ ಮತಯಂತ್ರಕ್ಕೆ ವಿವಿ ಪ್ಯಾಟ್ಗಳನ್ನು ಅಳವಡಿಸಲಾಗಿದ್ದು, ಇದರಿಂದ ತಾವು ಯಾರಿಗೆ ಮತದಾನ ಮಾಡಿದ್ದೇವೆ ಎಂಬ ಖಾತರಿ ಪ್ರತಿಯೊಬ್ಬ ಮತದಾರರಿಗೆ ಸಿಗಲಿದೆ. ವಿವಿ ಪ್ಯಾಟ್ ಮತಯಂತ್ರಗಳ ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ನೀಡಲು ಕ್ರಮ ಕೈಗೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕೋರಿಕೆ ಮೇರೆಗೆ ಅವರಿಗೆ ಅನುಕೂಲವಾದ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿ ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಮಹಿಳಾ ಮತಗಟ್ಟೆ: ಈ ಬಾರಿ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ತಲಾ ಒಂದು ಮಹಿಳಾ ಮತಗಟ್ಟೆ ಸ್ಥಾಪಿಸಲು ಚುನಾವಣಾ ಆಯೋಗ ಸೂಚಿಸಿದ್ದು, ಈ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಗಳು ಮಹಿಳೆಯರೇ ಆಗಿರುತ್ತಾರೆ ಎಂದು ಡಿಸಿ ಹೇಳಿದರು.
ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಬೈಂದೂರಿಗೆ ಭೂದಾಖಲೆಗಳ ಉಪನಿರ್ದೇಶಕರು, ಕುಂದಾಪುರಕ್ಕೆ ಕುಂದಾಪುರ ಉಪ ವಿಭಾಗಾಧಿಕಾರಿ, ಉಡುಪಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಕಾಪುವಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರು ಹಾಗೂ ಕಾರ್ಕಳಕ್ಕೆ ಉಡುಪಿ ನಗರಾಭಿವೃದ್ಧಿ ಸೆಲ್ನ ಯೋಜನಾ ನಿರ್ದೇಶಕರು ಚುನಾವಣಾಧಿಕಾರಿಗಳಾಗಿರುತ್ತಾರೆ. ಜಿಲ್ಲೆಯ ತಹಶೀಲ್ದಾರರು, ವಿಶೇಷ ತಹಶೀಲ್ದಾರರು ಸಹಾಯಕ ಚುನಾವಣಾಧಿಕಾರಿಗ ಳಾಗಿ ನೇಮಕಗೊಂಡಿದ್ದಾರೆ.
ಮಾದರಿ ನೀತಿ ಸಂಹಿತೆ: ಚುನಾವಣಾ ಮಾದರಿ ನೀತಿ ಸಂಹಿತೆ ಈಗಾಗಲೇ ಜಿಲ್ಲೆಯಲ್ಲಿ ಜಾರಿಗೊಂಡಿದ್ದು, ಇದರಂತೆ ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ರುವ ರಾಜಕೀಯ, ರಾಜಕಾರಣಿಗಳಿಗೆ ಸಂಬಂಧಿಸಿದ ಎಲ್ಲಾ ಬ್ಯಾನರ್, ಕಟೌಟ್, ಸರಕಾರಿ ಕಾರ್ಯಕ್ರಮಗಳ ಜಾಹಿರಾತು ಬೋರ್ಡ್ಗಳನ್ನು 24ಗಂಟೆಗಳ ಒಳಗೆ ತೆರವುಗೊಳಿಸಲಾಗುತ್ತದೆ ಎಂದರು.
ಯಾವುದೇ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಧಾರ್ಮಿಕ ಕಾರ್ಯಕ್ರಮ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಸಾರ್ವಜನಿಕ ಸಮಾರಂಭ ಗಳಿಗೆ ಅನುಮತಿ ಪಡೆದ ಸಂಘಸಂಸ್ಥೆ, ಇತರರು ಸಂಬಂಧಿತರಿಂದ ಹೊಸದಾಗಿ ಅನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಯಾವುದೇ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿ, ಸಭೆ ಸಮಾರಂಭಗಳಿಗೆ ಅನುಮತಿ ಕಡ್ಡಾಯವಾಗಿರುತ್ತದೆ. ಅಲ್ಲದೇ ಪೊಲೀಸ್ ಇಲಾಖೆಯಿಂದ ಮೈಕ್ ಅನುಮತಿ ಪಡೆಯಬೇಕು. ಪ್ರಚಾರದ ಸಮಯದ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಚುನಾವಣಾ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಲು, ವಿಡಿಯೋ ಸರ್ವೆಲೆನ್ಸ್ ತಂಡ, ಪ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವ್ಯೆವಿಂಗ್ ರೂಂ, ಸ್ಥಿರ ತನಿಖಾ ತಂಡ, ಲೆಕ್ಕಪತ್ರ ತಪಾಸಣಾ ತಂಡ, ಸೆಕ್ಟರ್ ಅಧಿಕಾರಿಗಳ ತಂಡ, ಅಂಕಿ ಅಂಶ ಸಂಗ್ರಹಣ ತಂಡ, ಎಂಸಿಎಂಸಿ ತಂಡಗಳನ್ನು ಈಗಾಗಲೇ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ ಉಪಸ್ಥಿತರಿದ್ದರು.
ಕಂಟ್ರೋಲ್ ರೂಮ್ ಅಸ್ತಿತ್ವಕ್ಕೆ
2018ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದೂರುಗಳನ್ನು ಸ್ವೀಕರಿಸಲು, ಜಿಲ್ಲಾಧಿಕಾರಿ ಕಚೇರಿಯಲ್ಲಿ, ದೂರು ನಿರ್ವಹಣಾ ಕೋಶ ತೆರೆಯಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ಟೋಲ್ಫ್ರೀ ಸಂಖ್ಯೆ-1077 ಹಾಗೂ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 0820- 2574920, 2574991ಕ್ಕೆ ಸಾರ್ವಜನಿಕರು ದೂರು ನೀಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.







