ಹನೂರು: ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಒತ್ತಾಯಿಸಿ ಧರಣಿ
ಹನೂರು,ಎ.02: ವಿದ್ಯುತ್ ಟ್ರಾನ್ಸ್ ಫಾರ್ಮರ್ ದುರಸ್ತಿ ಪಡಿಸುವಂತೆ ಹಾಗೂ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿ ಸೋಮವಾರ ಹನೂರು ಸಮೀಪದ ಮಂಗಲ ಗ್ರಾಮಸ್ಥರು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಾತನಾಡಿ, ಕಳೆದ ನಾಲ್ಕು ಹಿಂದೆ ಗ್ರಾಮದ ಮುಸ್ಲಿಂ ಹಾಗೂ ಲಿಂಗಾಯತರ ಬಡಾವಣೆಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ದುರಸ್ತಿಗೊಂಡಿತ್ತು. ಇದರಿಂದ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಇದರಿಂದ ರಾತ್ರಿ ವೇಳೆ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿತ್ತಲ್ಲದೇ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿತ್ತು. ಬೇರೆ ಬಡಾವಣೆಗಳಿಂದ ನೀರನ್ನು ಹೊತ್ತು ತರುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಗ್ರಾಪಂ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಕೂಡಾ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಅಭ್ಯಾಸ ನಡೆಸಲು ಕಷ್ಟವಾಗುತ್ತಿದ್ದು, ಕಳೆದ 4 ದಿನದಿಂದ ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ. ಈ ದಿಸೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ದುರಸ್ತಿಪಡಿಸುವುದರ ಮೂಲಕ ಬಡಾವಣೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಪಿಡಿಒ ಶಿವಪ್ರಸಾದ್, ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಘಟನೆಯ ಬಗ್ಗೆ ತಿಳಿಸಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆದುಕೊಳ್ಳುವಂತೆ ಪ್ರತಿಭಟನಕಾರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೊಪ್ಪದ ಪ್ರತಿಭಟನಕಾರರು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಎಚ್ಚರಿಸಿದರು.
ಸುದ್ದಿ ತಿಳಿದು ಹನೂರು ಪೋಲಿಸರು ಸ್ಥಳಕ್ಕಾಗಮಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದಾಗ ಸಂಜೆಯೊಳಗಡೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಸುವುದಾಗಿ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.
ಸುಮಾರು1 ಗಂಟೆಗಳ ಕಾಲ ಸಂಚಾರ ಸ್ಥಗಿತವಾಗಿದ್ದರಿಂದ ಮ.ಬೆಟ್ಟ, ಮೈಸೂರು, ಬೆಂಗಳೂರು ಕಡೆಗಳಿಗೆ ತೆರಳುವ ಪ್ರಯಾಣಿಕರು ತೊಂದರೆ ಅನುಭವಿಸಿದರು.