ಎ.8ರಂದು ವಿಶೇಷ ಮತದಾರರ ಪರಿಷ್ಕರಣೆ ಅಭಿಯಾನ : ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಎ.3: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎ.8ರಂದು ವಿಶೇಷ ಮತದಾರರ ಪರಿಷ್ಕರಣೆ ಶಿಬಿರವನ್ನು ಜಿಲ್ಲೆಯಾದ್ಯಂತ ಏರ್ಪಡಿಸ ಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಉಡುಪಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ 1.25ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಈ ಶಿಬಿರದಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೆ ಸಂಬಂದಪಟ್ಟ ಎಲ್ಲಾ ಬಿಎಲ್ಓಗಳು ಆಯಾ ಕಚೇರಿಗಳಲ್ಲಿ ಹಾಜರಿದ್ದು, ಮತದಾರರ ಪಟ್ಟಿಯಲ್ಲಿ ಹೊಸ ಸೇರ್ಪಡೆ ಹಾಗೂ ನ್ಯೂನತೆಗಳನ್ನು ಸರಿಪಡಿಸಲಿರುವರು. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ಎ.14 ಕೊನೆಯ ದಿನವಾಗಿದೆ ಎಂದು ಅವರು ಹೇಳಿದರು.
ಮತದಾನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎ.5ರಂದು ಬೆಳಗ್ಗೆ 9:30ಕ್ಕೆ ನಗರದ ಬಸ್ ನಿಲ್ದಾಣದಿಂದ ಅಜ್ಜರ ಕಾಡು ಪುರಭವನದವರೆಗೆ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಘಟಕವನ್ನು ಕೊಡುಗೆಯಾಗಿ ನೀಡಿರುವ ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯೆ ನಿರುಪಮಾ ಪ್ರಸಾದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ದಲ್ಲಿ ಉದ್ಯಮಿ ಪುರುಷೋತ್ತಮ ಶೆಟ್ಟಿ, ಅಮೃತಾ ಪುರುಷೋತ್ತಮ ಶೆಟ್ಟಿ, ಲಯನ್ಸ್ ಕ್ಲಬ್ನ ಡಾ.ರವೀಂದ್ರನಾಥ್ ಶೆಟ್ಟಿ, ವಿಲ್ಫ್ರೇಡ್ ಡಿಸೋಜ, ರಂಜನ್ ಕೆ.ಮೊದಲಾದವರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.







