ಸಂವಿಧಾನದ ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಿ: ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್
ಚುನಾವಣಾ ಪೂರ್ವಸಿದ್ಧತಾ ಸಭೆ
![ಸಂವಿಧಾನದ ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಿ: ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ಸಂವಿಧಾನದ ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಿ: ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್](https://www.varthabharati.in/sites/default/files/images/articles/2018/04/7/b l shankar.jpg)
ಚಿಕ್ಕಮಗಳೂರು, ಎ.7: ದೇಶದ ಸಂವಿಧಾನವನ್ನು ಯಥಾವತ್ತಾಗಿ ಉಳಿಸಿ ಕೊಳ್ಳುವ ನಿಟ್ಟಿನಲ್ಲಿ ಜನತೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಡಾ.ಬಿ.ಎಲ್.ಶಂಕರ್ ಕರೆ ನೀಡಿದ್ದಾರೆ.
ಯುವ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಚುನಾವಣೆ ಪೂರ್ವಸಿದ್ದತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಕಳೆದ ನಾಲ್ಕು ವರ್ಷಗಳಲ್ಲಿ ಸತತವಾಗಿ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದೆ. ಅಲ್ಲದೇ ಸಂಘಪರಿವಾರದ ಕಿಡಿಗೇಡಿಗಳು, ಮತಾಂಧರು ನಡೆಸುತ್ತಿರುವ ಸಂವಿಧಾನ ವಿರೋಧಿ ಕೃತ್ಯಗಳ ಬಗ್ಗೆ ಮೌನವಹಿಸುವ ಮೂಲಕ ಪರೋಕ್ಷ ಬೆಂಬಲ ನೀಡುತ್ತಿದೆ. ಆ ಪಕ್ಷದ ನಾಯಕರ ನಡೆ ಸಂವಿಧಾನ ವಿರೋಧಿಯಾಗಿದೆ. ಅನಂತಕುಮಾರ ಹೆಗಡೆಯಂತಹ ಮತಾಂಧರು ಸಂವಿಧಾನವನ್ನು ಬದಲಿಸುವ ಕುರಿತು ಈಗಾಗಲೇ ಬಹಿಂರಂಗವಾಗಿ ಮಾತನಾಡುತ್ತಿದ್ದಾರೆ. ಇಂತಹ ಸಂತತಿಯವರ ಆಡಳಿತದಿಂದ ಭವಿಷ್ಯದಲ್ಲಿ ಸಂವಿಧಾನಕ್ಕೆ ಗಂಡಾಂತರ ಕಟ್ಟಿಟ್ಟ ಬುತ್ತಿಯಾಗಿದೆ. ಅಂಬೇಡ್ಕರ್ ರಚಿಸಿರುವ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಈ ಸಂವಿಧಾನದಿಂದಾಗಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿಗಳಿಸಿದೆ. ಇಂತಹ ಸಂವಿಧಾನ ರಕ್ಷಣೆ ದೇಶದ ಪ್ರತೀ ನಾಗರಿಕನ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ದೇಶದ ಆಡಳಿತವನ್ನು ಸಂವಿಧಾನ ವಿರೋಧಿಗಳ ಕೈಗೆ ನೀಡಬಾರದು. ಮತದಾರರು ಮುಂದಿನ ಚುನಾವಣೆಯಲ್ಲಿ ಇಂತಹವರಿಗೆ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು.
ಬಿಜೆಪಿ ಈಗಾಗಲೇ ಅನೇಕ ರಾಜ್ಯಗಳನ್ನು ವ್ಯಾಪಿಸಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲೂ ಗೆದ್ದರೆ ಅದು ಬಲಿಷ್ಠವಾಗುತ್ತದೆ. ಆ ಪಕ್ಷದ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸುವವರೇ ಇಲ್ಲದಂತಾಗುತ್ತದೆ. ಹೇಳುವವರು ಮತ್ತು ಕೇಳುವವರೇ ಇಲ್ಲದಂತಾಗುವುದರಿಂದ ಮುಂದೊಂದು ದಿನ ಸಂವಿಧಾನದ ಬದಲಾವಣೆಗೆ ಬಿಜೆಪಿ ಮುಂದಾಗುತ್ತದೆ ಎಂದು ಎಚ್ಚರಿಸಿದ ಅವರು, ಇದನ್ನು ದೇಶ ಮತ್ತು ರಾಜ್ಯದ ಜನತೆ, ಪಕ್ಷದ ಕಾರ್ಯಕರ್ತರು ಗಂಭೀರವಾಗಿ ತೆಗೆದುಕೊಳ್ಳಬೇಕು. ಸಂವಿಧಾನವನ್ನು ರಕ್ಷಿಸುವ ನಿಟ್ಟಿನಲ್ಲಿ ಮುಂದಿನ ಚುನಾವಣೆಗಳಲ್ಲಿ ಶತಾಯಗತಾಯ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲೇಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಡಿ.ಎಲ್.ವಿಜಯ್ಕುಮಾರ್ ಮಾತನಾಡಿ, ಕಾಂಗ್ರೆಸ್ನ ವರಿಷ್ಠರು ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ ಅವರ ಗೆಲುವಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರಾಜ್ಯ ಸರಕಾರದ ಸಾಧನೆಗಳನ್ನು ಮನೆಮನೆಗಳಿಗೂ ಮುಟ್ಟಿಸಿದಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವು ನಿಶ್ಚಿತ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಚುನಾವಣೆಯಲ್ಲಿ ಪಕ್ಷಕ್ಕಾಗಿ ಸಮರೋಪಾದಿಯಲ್ಲಿ ದುಡಿಯಬೇಕು. ಈ ಬಾರಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಪಕ್ಷದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತದಿಂದಾಗಿ ರಾಜ್ಯದ ಜನತೆ ರೋಸಿ ಹೋಗಿದ್ದಾರೆ. ರಾಜ್ಯದಾದ್ಯಂತ ಪಕ್ಷದ ಅಭ್ಯರ್ಥಿಗಳು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲ್ಲಿದ್ದಾರೆ. ಕ್ಷೇತ್ರದಲ್ಲಿ ಸತತ ಎರಡು ಬಾರಿ ಶಾಸಕರಾಗಿ ಮತದಾರರನ್ನು ಮರೆತಿರುವ ಶಾಸಕರನ್ನು ಈ ಬಾರಿ ಜನತೆ ತಿರಸ್ಕರಿಸುವ ಮನಸ್ಸು ಮಾಡಿರುವುದು ಜಗ್ಗಜ್ಜಾಹೀರಾಗಿದೆ. ರಾಜ್ಯದಲ್ಲಿ ಉತ್ತಮ ಆಡಳಿತ ಹಾಗೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಇಲ್ಲಿನ ಮತದಾರರ ಚುನಾಯಿಸಲಿದ್ದಾರೆಂದು ಅವರು ಭವಿಷ್ಯ ನುಡಿದರು.
ಇದೇ ವೇಳೆ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಾಹಿಲ್ ಶರೀಫ್ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದರು. ಅರಣ್ಯ, ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್.ಮಹೇಶ್, ಕೆಪಿಸಿಸಿ ಕಿಸಾನ್ ಸೆಲ್ನ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ವಿ.ಶಿವಕುಮಾರ್, ಪಕ್ಷದ ಮುಖಂಡರಾದ ಎಂ.ಸಿ.ಶಿವಾನಂದ ಸ್ವಾಮಿ, ಯಶೋಧಾ, ಮಂಜೇಗೌಡ, ಸಿ.ಸಿ.ಮಧು, ಬಿ.ಎಸ್.ಆದಿತ್ಯ, ಜೆ.ವಿನಾಯಕ, ಈಶ್ವರ್, ನಯಾಝ್, ಆದಿಲ್, ಎನ್.ಎಸ್.ಚೇತನ್ ಮತ್ತಿತರರು ಉಪಸ್ಥಿತರಿದ್ದರು.