ಮತದಾನ ಪ್ರಕ್ರಿಯೆಯಿಂದ ಯಾರೂ ವಂಚಿತರಾಗಬಾರದು: ಆರ್.ಸ್ನೇಹಲ್
![ಮತದಾನ ಪ್ರಕ್ರಿಯೆಯಿಂದ ಯಾರೂ ವಂಚಿತರಾಗಬಾರದು: ಆರ್.ಸ್ನೇಹಲ್ ಮತದಾನ ಪ್ರಕ್ರಿಯೆಯಿಂದ ಯಾರೂ ವಂಚಿತರಾಗಬಾರದು: ಆರ್.ಸ್ನೇಹಲ್](/images/placeholder.jpg)
ಧಾರವಾಡ, ಎ.11: 18 ವರ್ಷ ತುಂಬಿದ ಎಲ್ಲರೂ ಮತವನ್ನು ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನದ ಪ್ರಕ್ರಿಯೆಯಿಂದ ವಂಚಿತರಾಗಬಾರದು. ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಬಹಳ ಮುಖ್ಯವಾಗಿದೆ ಎಂದು ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆರ್.ಸ್ನೇಹಲ್ ಹೇಳಿದ್ದಾರೆ.
ಬುಧವಾರ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2017-18ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್.ಎಸ್.ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಫ್ಯಾಷನ್ ಶೋ ಕಾರ್ಯ್ರಮದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ ಚಲಾವಣೆ ಮಾಡಬೇಕು. ಎಲ್ಲರೂ ಮತದಾನ ಮಾಡುವುದು ಅವಶ್ಯವಾಗಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು. ಸತತ ಪ್ರಯತ್ನದಿಂದ ಯಶಸ್ಸು ಖಂಡಿತ. ನಿರಂತರ ಹಾಗೂ ಆಳವಾದ ಅಧ್ಯಯನ ಬದುಕಿಗೆ ಸಹಾಯಕವಾಗುತ್ತದೆ. ಗ್ರಂಥಾಲಯವನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡು, ವಿಷಯಶೀಲರಾಗಬೇಕು. ಎಲ್ಲ ವಿಷಯಗಳ ಬಗ್ಗೆ ಆಳವಾಗಿ ತಿಳಿದುಕೊಳ್ಳಬೇಕು. ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದರು.
ಸಾಕಷ್ಟು ತೊಂದರೆಗಳ ನಡುವೆಯೂ ಅತ್ಯುತ್ತಮ ಸಾಧನೆಗಳನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುವಲ್ಲಿ ನಿರತರಾಗಬೇಕು. ಶಿಕ್ಷಣದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಶಿಕ್ಷಣಾಧಿಕಾರಿ ಬಿ.ಎಸ್.ಮಾಯಾಚಾರಿ, ಧಾರವಾಡ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಝಿ, ಪ್ರಾಂಶುಪಾಲೆ ಡಾ.ಸರಸ್ವತಿ ಆರ್.ಕಳಸದ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.