ನಾಲ್ಕೂರು ಪಿಡಿಒ ರಾಸಲೀಲೆ ವೀಡಿಯೋ ವೈರಲ್: ಸಮತಾ ಸೈನಿಕದಳದಿಂದ ಜಿಪಂ ಸಿಇಒಗೆ ದೂರು

ಉಡುಪಿ, ಎ.12: ಉಡುಪಿ ತಾಲೂಕಿನ ನಾಲ್ಕೂರು ಗ್ರಾಪಂ ಕಚೇರಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಅನಂತ ಪದ್ಮನಾಭ ಎಂಬವರು ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ರೀತಿ ವರ್ತಿಸಿರುವ ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸಮತಾ ಸೈನಿಕ ದಳ ಉಡುಪಿ ಜಿಲ್ಲಾ ಸಮಿತಿಯು ಎ.11ರಂದು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ರಾಸಲೀಲೆಯ ಸೀಡಿ ಸಹಿತ ದೂರು ಸಲ್ಲಿಸಿದೆ.
ನಾಲ್ಕೂರು ಗ್ರಾಪಂನಲ್ಲಿ ಭ್ರಷ್ಟಾಚಾರ, ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಪಿಡಿಒ ಇದನ್ನು ಲೆಕ್ಕಿಸದೆ ಭ್ರಷ್ಟಾಚಾರವನ್ನು ಮುಂದುವರಿಸಿದ್ದರು. ಮಾಜಿ ಸೈನಿಕರಾಗಿರುವ ಇವರು ಕಚೇರಿಯ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಇವರಿಗೆ ಸ್ಥಳೀಯ ಜಿಪಂ ಸದಸ್ಯರ ಕೃಪಾ ಕಟಾಕ್ಷವೂ ಕೂಡ ಇದೆ ಎಂದು ಮನವಿಯಲ್ಲಿ ದೂರಲಾಗಿದೆ.
ಇದೀಗ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ರಾಸಲೀಲೆ ನಡೆಸಿ ರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪಿಡಿಒ ಅನಂತ ಪದ್ಮನಾಭ ನಾಯಕ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಕೂಡಲೇ ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವಿಶ್ವನಾಥ್ ಪೇತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಡೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಧಾಕರ್ ಸೂರ್ಗೊಳಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಪರಿಶೀಲಿಸಿ ಕ್ರಮ: ಜಿಪಂ ಸಿಇಒ
ನಾಲ್ಕೂರು ಪಿಡಿಒ ವಿರುದ್ಧ ದೂರು ಬಂದಿದ್ದು, ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುವುದು. ಇದರಲ್ಲಿ ತಪ್ಪು ಕಂಡು ಬಂದರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.