ಬಲಿಷ್ಟ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕಾಗಿ ಮತದಾನದಲ್ಲಿ ಪಾಲ್ಗೊಳ್ಳಿ: ಶಿವಮೊಗ್ಗ ಜಿಲ್ಲಾಧಿಕಾರಿ
ಶಿವಮೊಗ್ಗ, ಏ. 13: ಭಾರತದಲ್ಲಿ ಜನಿಸಿದ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತ ಚಲಾಯಿಸುವುದರ ಮೂಲಕ ಬಲಿಷ್ಟ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ಹೇಳಿದರು.
ಅವರು ಇಂದು ಜಿಲ್ಲಾ ಚುನಾವಣಾ ಶಾಖೆ, ಜಿಲ್ಲಾ ವ್ಯವಸ್ಥಿತ ಮತದಾರರ ಜಾಗೃತಿ ಸಮಿತಿ ಹಾಗೂ ಸಾರಿಗೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಖಾಸಗಿ ಬಸ್ನಿಲ್ದಾಣದಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಯಂತ್ರಗಳ ಬಳಕೆ ಕುರಿತು ಪ್ರಾತ್ಯಕ್ಷಿತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮತಯಂತ್ರದಲ್ಲಿ ತಾವು ಚಲಾಯಿಸಿದ ಮತವು ತಮ್ಮ ನಿರೀಕ್ಷೆಯಂತೆಯೇ ತಮ್ಮ ಆಯ್ಕೆಯ ಅಭ್ಯರ್ಥಿಗೆ ಹೋಗಲಿದೆ. ಅದನ್ನು ತಾವು ವಿವಿ ಪ್ಯಾಟ್ ಯಂತ್ರದಲ್ಲಿ ಕಾಣುವ ಸಣ್ಣಪರದೆಯ ಮೇಲೆ ಕೆಲ ಸೆಕಂಡುಗಳ ಕಾಲ ವೀಕ್ಷಿಸಿ ಖಚಿತಪಡಿಸಿಕೊಳ್ಳಬಹುದಾಗಿದೆ ಎಂದವರು ನುಡಿದರು.
18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಅರ್ಹ ಅಭ್ಯರ್ಥಿಗೆ ಚಲಾಯಿಸಿ, ತಮ್ಮನ್ನಾಳುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ನಿಮಗಿರುವ ಸುವರ್ಣ ಅವಕಾಶ ಇದಾಗಿದೆ ಎಂದ ಅವರು, ಮತದಾರರು ಅಭ್ಯರ್ಥಿಗಳು ನೀಡುವ ಆಸೆ, ಆಕಾಂಕ್ಷೆಗಳಿಗೆ ಬಲಿಯಾಗದೇ, ಯಾವುದೇ ಭೀತಿ, ಅತಂಕವಿಲ್ಲದೆ ಸ್ವತಂತ್ರವಾಗಿ ಮತಗಟ್ಟೆಗೆ ಬಂದು ಮತಚಲಾಯಿಸುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿ, ಸಂವಿಧಾನದ ಆಶಯದಂತೆ ಮತದಾನದ ಮಹತ್ವವನ್ನು ಅರಿತು ಅರ್ಹ ಹಾಗೂ ಯೋಗ್ಯ ಅಭ್ಯರ್ಥಿಗೆ ಮತಚಲಾಯಿಸುವಂತೆ ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಖಾಸಗಿ ಸಾರಿಗೆ ಬಸ್ಸುಗಳಲ್ಲಿ ಪ್ರದರ್ಶಿಸಲು ಮತದಾನ ಜಾಗೃತಿಯ ಕುರಿತಾದ ಕಿರುಚಿತ್ರದ ಸೀಡಿಗಳನ್ನು ಜಿಲ್ಲಾಧಿಕಾರಿಗಳು ಬಸ್ ಮಾಲೀಕರಿಗೆ ವಿತರಿಸಿದರು ಹಾಗೂ ಮತದಾರರ ಜಾಗೃತಿಗಾಗಿ ಬಸ್ ಮಾಲೀಕರ ಸಂಘವು ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಕಟಿಸಲಾದ ಕರಪತ್ರವನ್ನು ಬಿಡುಗಡೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವರಾಜ್ ಪಾಟೀಲ್, ಬಸ್ ಮಾಲೀಕರ ಸಂಘದ ಅಧ್ಯಕ್ಷ ಜಯಪ್ರಕಾಶ್ ಶೆಣೈ ಸೇರಿದಂತೆ ಖಾಸಗಿ ಬಸ್ ಮಾಲೀಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಪ್ರಯಾಣಿಕರು ಉಪಸ್ಥಿತರಿದ್ದರು.