ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ: ಖಂಡನೆ
ಮಂಗಳೂರು, ಎ.17: ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ತೀರ್ಪು ಮರು ಪರಿಶೀಲಿಸುವ ಜತೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಕೊಲೆ ಮಾಡಿದ ಆರೋಪಿಗಳನ್ನು ಕಠಿಣ ಕಾನೂನು ಕ್ರಮ ಜರುಗಿಸಿ ಅವರಿಗೆ ಗಲ್ಲು ಶಿಕ್ಷೆ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ)ದ ಜಿಲ್ಲಾ ಸಂಚಾಲಕ ಎಸ್.ಪಿ. ಆನಂದ ಆಗ್ರಹಿಸಿದರು.
ಅವರು ಮಂಗಳವಾರ ನಗರದ ಪ್ರೆಸ್ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಪ್ರದೇಶದ ಉನ್ನಾವೋದಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕಾಶ್ಮೀರದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಕೊಲೆಯನ್ನು ದಲಿತ ಸಂಘಟನೆ ಖಂಡಿಸುವ ಜತೆಯಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮೇ.23ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಹಕ್ಕೋತ್ತಾಯ ಮನವಿ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭ ಸಮಿತಿಯ ರಘುವೀರ್ ಸೂಟರ್ಪೇಟೆ, ಅನಿಲ್ ಕಮಾರ್, ರಮೇಶ್ ಕುಮಾರ್ ಹಾಗೂ ಮೋನಪ್ಪ ಉಪಸ್ಥಿತರಿದ್ದರು.
Next Story