ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ: ರಾಹುಲ್ ಗಾಂಧಿ
ಅಂಕೋಲಾದಲ್ಲಿ ಭರ್ಜರಿ ರೋಡ್ ಶೋ

ಅಂಕೋಲಾ, ಎ.26: ದೇಶದ ಬಡತನ ನಿರ್ಮೂಲನೆ ಮಾಡುತ್ತೇನೆ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿ ವಿದೇಶಗಳನ್ನು ಸುತ್ತುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುವುದಾಗಿ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಇಂತಹ ಯಾವುದೇ ಹೇಳಿಕೆಗಳಿಗೆ ಜನರು ಮರುಳಾಗುವುದಿಲ್ಲ. ಈ ಬಾರಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಗುರುವಾರ ಅಂಕೋಲಾ ಪಟ್ಟಣದಲ್ಲಿ ಹಮ್ಮಿಕೊಂಡ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಅನ್ಯ ಪಕ್ಷದವರನ್ನು ಭ್ರಷ್ಟರೆಂದು ಮಾತನಾಡುವ ಮೋದಿ ರಾಜ್ಯದಲ್ಲಿ ಕಳಂಕಿತರಿಗೆ ಹೆಚ್ಚಿನ ಸ್ಥಾನಮಾನ, ಟಿಕೆಟ್ ನೀಡಿರುವುದು ಅವರ ಹಸಿ ಸುಳ್ಳಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿ, ಕರ್ನಾಟಕ ಇತಿಹಾಸದಲ್ಲೇ ಮುಖ್ಯಮಂತ್ರಿಯಾಗಿ ಜೈಲಿಗೆ ಹೋಗಿದ್ದ ಬಿ.ಎಸ್.ಯಡಿಯೂರಪ್ಪಅವರನ್ನೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಈಗ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಯಡಿಯೂರಪ್ಪ ಸೇರಿದಂತೆ 224 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವವರಲ್ಲಿ ಬಹುತೇಕರು ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರು ಎಂದು ಟೀಕಿಸಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ, ಇಂಧನ ಸಚಿವ ಡಿ.ಕೆ. ಶಿವಕುಮಾರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ ಸೈಲ್, ಯಲ್ಲಾಪುರ ಅಭ್ಯರ್ಥಿ ಶಿವರಾಮ ಹೆಬ್ಬಾರ ಸೇರಿದಂತೆ ಹಲವರು ಭಾಗವಹಿಸಿದ್ದರು.
ನಿಗದಿತ ಸಮಯಕ್ಕೆ ಪಟ್ಟಣದ ಜೈಹಿಂದ್ ಮೈದಾನದಲ್ಲಿ ಹೆಲಿಕಾಪ್ಟರ್ ಮೂಲಕ ರಾಹುಲ್ ಗಾಂಧಿ ಬಂದಿಳಿದು ಅಲ್ಲಿಂದ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಸುಮಾರು 10 ಸಾವಿರಕ್ಕೂ ಅಧಿಕ ಜನರು ಜಮಾಯಿಸಿದ್ದರು. ಇದೇವೇಳೆ ವಾಹನದಿಂದ ಇಳಿದ ರಾಹುಲ್, ಸಿದ್ದರಾಮಯ್ಯ, ದೇಶಪಾಂಡೆ, ವೇಣುಗೋಪಾಲ್ ಮತ್ತಿರರು ಸುಮಾರು ಮುಕ್ಕಾಲು ಕಿಲೋಮೀಟರ್ಪಾದಯಾತ್ರೆ ಮಾಡಿ ಸಾರ್ವಜನಿಕರನ್ನು ಭೇಟಿ ಮಾಡಿದರು.
ನಂತರ ಪಟ್ಟಣದ ಕಾಮತ್ ಪ್ಲಸ್ ಹೊಟೇಲ್ನಲ್ಲಿ ಊಟ ಮಾಡಿ ಕುಮಟಾಕ್ಕೆ ಪ್ರಯಾಣ ಬೆಳೆಸಿದರು.