ಉಡುಪಿ: ಮತದಾನ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ

ಉಡುಪಿ, ಎ. 29: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಶೇ.100 ಮತದಾನ ಆಗುವ ಕುರಿತು ಎಲ್ಲ ರೀತಿಯ ಅಗತ್ಯ ಕ್ರಮ ಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತ ದಾನ ಜಾಗೃತಿಗಾಗಿ ನಗರದ ಜೋಡುಕಟ್ಟೆಯಲ್ಲಿ ರವಿವಾರ ಏರ್ಪಡಿಸಲಾದ ರಂಗೋಲಿ ಸ್ಪರ್ಧೆಯನ್ನು ವೀಕ್ಷಿಸಿ ಅವರು ಮಾತನಾಡುತ್ತಿದ್ದರು.
ಚುನಾವಣೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಮಾಡಲು ಪುರುಷರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ವಿಶೇಷಚೇತನರು, ವಾಕ್, ಶ್ರವಣ, ದೃಷ್ಠಿದೋಷವುಳ್ಳವರು, ಹಿರಿಯ ನಾಗರಿಕರು ಎಲ್ಲರಿಗೂ ವಿಶೇಷ ಕಾರ್ಯಕ್ರಮಗಳ ಮೂಲಕ ಮತ ದಾನದ ಕುರಿತು ಅರಿವು ಮೂಡಿಸಲಾಗುತ್ತಿದೆ. ಈ ಮೂಲಕ ಶೇ.100 ಮತದಾನದ ಗುರಿಯನ್ನು ಹೊಂದಲಾಗಿದೆ ಎಂದರು.
ಪ್ರತಿಯೊಬ್ಬ ಮತದಾರರು ಯಾವುದೇ ಆಸೆ, ಆಮಿಷ, ಒತ್ತಡ, ಪ್ರಲೋಬನೆ ಗಳಿಗೆ ಒಳಗಾಗದೇ ತಮ್ಮ ಸ್ವಂತ ವಿವೇಚನೆಯನ್ನು ಬಳಸಿ ಯೋಗ್ಯ ಅ್ಯರ್ಥಿಗೆ ಮತದಾನ ಮಾಡಬೇಕು ಎಂದು ಕಾಪಶಿ ಹೇಳಿದರು.
ಪೌರಾಯುಕ್ತ ಜನಾದರ್ನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ವಿಕಲಚೇತನ ಇಲಾಖೆ ಅಧಿಕಾರಿ ನಿರಂಜನ ಭಟ್, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ., ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಉಪಸ್ಥಿತರಿದ್ದರು. ಮತದಾನದ ಜಾಗೃತಿ ಸಂದೇಶವನ್ನು ಬಿಂಬಿಸುವ ರಂಗೋಲಿಗಳು ಗಮನ ಸೆಳೆದವು.