ಬೆಳ್ತಂಗಡಿ : ಮಾಜಿ ಸಚಿವ ಕೆ.ಗಂಗಾದರ ಗೌಡ ಕಾಂಗ್ರೆಸ್ ಸೇರ್ಪಡೆ
ಬೆಳ್ತಂಗಡಿ, ಎ. 30: ಮಾಜಿ ಸಚಿವ, ಹಿರಿಯ ಬಿಜೆಪಿ ಮುಖಂಡ ಕೆ. ಗಂಗಾದರ ಗೌಡ ಮೇ 2ರಂದು ಬೆಳ್ತಂಗಡಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಸಚಿವ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರ ಶಾಸಕ ಕೆ. ವಸಂತ ಬಂಗೇರರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಬೆಳ್ತಂಗಡಿಯ ಹಿರಿಯ ರಾಜಕೀಯ ಮುಖಂಡರಾದ ಕೆ ಗಂಗಾಧರ ಗೌಡ ಅವರು, ಬೆಳ್ತಂಗಡಿಯಲ್ಲಿ ಎರಡು ಬಾರಿ ಶಾಸಕರಾಗಿ, ಸಚಿವರಾಗಿ ಜನಾನುರಾಗಿ ನಾಯಕರಾಗಿದ್ದವರು. ಇವರು ಕಳೆದ ಕೆಲ ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಅವರ ಪುತ್ರ ರಂಜನ್ ಗೌಡ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಬಾರಿಯ ಟಿಕೇಟಿಗೆ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು.
ಇದೀಗ ಗಂಗಾಧರ ಗೌಡರು ಬಿಜೆಪಿಯಲ್ಲಿನ ತಾರತಮ್ಯ ನೀತಿಯನ್ನು ವಿರೋಧಿಸಿ, ಬಿಜೆಪಿ ತೊರೆಯಲು ನಿರ್ಧರಿಸಿರುವುದಾಗಿ ಪ್ರಕಟಿಸಿದ್ದಾರೆ. ಇದು ಬೆಳ್ತಂಗಡಿಯಲ್ಲಿ ಹೊಸ ರಾಜಕೀಯ ಬೆಳವಣಿಗೆಗೆ ಕಾರಣವಾಗಲಿದೆ. ತಾಲೂಕಿನ ಇಬ್ಬರು ರಾಜಕೀಯ ಮುಖಂಡರುಗಳು ಒಂದೇ ಪಕ್ಷದಲ್ಲಿ ಕಾಣಿಸಿ ಕೊಳ್ಳಲಿದ್ದಾರೆ. ಹಿರಿಯ ನಾಯಕನಾಗಿರುವ ಗಂಗಾಧರ ಗೌಡರ ಈ ನಿರ್ಧಾರ ಬಿಜೆಪಿ ಪಾಲಿಗೆ ತೀವ್ರ ಹಿನ್ನಡೆಗೆ ಕಾರಣವಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.