ಹಸಿವೆ ಮುಕ್ತ ಕರ್ನಾಟಕ ಸಿದ್ದರಾಮಯ್ಯ ಸರಕಾರದ ಸಾಧನೆ: ಪ್ರಮೋದ್

ಉಡುಪಿ, ಮೇ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿಗೆ ತಂದು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿರುವುದು ಕೆಲವರಿಗೆ ನುಂಗಲಾರದ ತುತ್ತಾಗಿದೆ. ಸರಕಾರದ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಬದ್ಧತೆ ಬೇಕು. ಜನರ ಬದುಕನ್ನು ಹಸನುಗೊಳಿಸುವ ಯೋಜನೆಗಳನ್ನು ಮುಕ್ತ ಮನಸ್ಸಿನಿಂದ ಕಾರ್ಯಗತಗೊಳಿಸ ಬೇಕು. ಇದಕ್ಕೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಪರ್ಕಳ, ಮಣಿಪಾಲ, ಸರಳೆಬೆಟ್ಟು, ಕಡೆಕಾರ್ಗಳಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಚಾರ ಸಭೆಗಳನ್ನುದ್ದೇಶಿಸಿ ಅವರು ಮಾತನಾಡುತಿದ್ದರು. ಉಡುಪಿ ಕ್ಷೇತ್ರದಲ್ಲಿ ರಾಜ್ಯ ಸರಕಾರದ ಜನೋಪಯೋಗಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಕಾರ್ಯಕರ್ತರು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮತವನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಾಗಿದೆ ಎಂದರು.
ಎಐಸಿಸಿ ಸದಸ್ಯ ಅಮೃತ್ ಶೆಣೈ ಮಾತನಾಡಿ, ಕಳಂಕಿತ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಮೂಲಕ ಭ್ರಷ್ಟಾಚಾರ ಪೋಷಣೆಗೆ ಸ್ವತಃ ಪ್ರಧಾನಿ ಮೋದಿ ಮುಂದಾಗಿರುವುದು ಕೇಂದ್ರ ಸರಕಾರ ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎನ್ನುದಕ್ಕೆ ಸ್ಪಷ್ಟ ಉದಾಹರಣೆ ಎಂದು ಟೀಕಿಸಿದರು.
ಸಭೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಪೂರ್, ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮುಖಂಡರಾದ ದಿವಾಕರ ಕುಂದರ್, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಅನಂತ್ ನಾಯ್ಕಿ, ಜನಾರ್ದನ ಭಂಡಾ ರ್ಕಾರ್, ಚಂದ್ರಿಕಾ ಶೆಟ್ಟಿ, ಸುಕೇಶ್ ಕುಂದರ್, ಗಣೇಶ್ ನೆರ್ಗಿ, ಶೇಖ್ ಜಿ. ಕೋಟ್ಯಾನ್ ಉಪಸ್ಥಿತರಿದ್ದರು.