ದೇವರ ಹೆಸರಿನಲ್ಲಿ ಮತ ಯಾಚನೆಗೆ ಖಂಡನೆ: ಈಶ್ವರ ಉಳ್ಳಾಲ್
ಮಂಗಳೂರು, ಮೇ 8: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ದೇವರ ಹೆಸರಿನಲ್ಲಿ ಮತ ಯಾಚನೆ ಮಾಡುವುದನ್ನು ಖಂಡಿಸುವುದಾಗಿ ಕೆಪಿಸಿಸಿ ಪ್ರಚಾರ ಸಮಿತಿ ಸಂಚಾಲಕ ಈಶ್ವರ ಉಳ್ಳಾಲ್ ಹೇಳಿದರು.
ಬಿಜೆಪಿ ಕಾರ್ಯಕರ್ತರು ಪ್ರಚೋದನಾಕಾರಿ ಮಾತುಗಳನ್ನು ಆಡುವ ಮೂಲಕ ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದಾರೆ. ಮತಯಾಚನೆ ಸಂದರ್ಭ ಬಿಜೆಪಿ ಕಾರ್ಯಕರ್ತರು ದೇವರ ಭಾವಚಿತ್ರ ಬಳಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ಬೆದರಿಕೆ ಹಾಕುತ್ತಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆ ಮತ್ತು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಉಳ್ಳಾಲ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಸಿದ್ದರಾಮಯ್ಯ ಸರಕಾರ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡು, ಜನಪರ ಯೋಜನೆ ರೂಪಿಸಿದೆ. ಕೇಂದ್ರದ ನರೇಂದ್ರ ಮೋದಿ ಸರಕಾರ ಯಾವುದೇ ಭರವಸೆ ಈಡೇರಿಸಿಲ್ಲ, ಬೆಲೆ ಏರಿಕೆಗೆ ತಡೆದಿಲ್ಲ ಎಂದರು.
ಉಳ್ಳಾಲ ನಗರಸಭಾ ಸದಸ್ಯ ದಿನೇಶ್ ರೈ, ಮುಖಂಡರಾದ ಸುರೇಶ್ ಭಟ್ನಗರ, ರವೂಫ್ ಸಿಎಂ, ಅಭಿಷೇಕ್ ಉಳ್ಳಾಲ್ ಉಪಸ್ಥಿತರಿದ್ದರು.