ರಾಜಭವನದ ಸುತ್ತಮುತ್ತ ಸಂಚಾರ ನಿಷೇಧ: ವಾಹನ ಸವಾರರ ಪರದಾಟ
ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಹಿನ್ನೆಲೆ
ಬೆಂಗಳೂರು,ಮೇ 17: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಾಜಭವನ ಸುತ್ತಮುತ್ತಲಿನ ರಸ್ತೆಗಳಲ್ಲಿ 2 ಗಂಟೆಗೂ ಅಧಿಕ ಸಮಯ ಸಾರ್ವಜನಿಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧ ಮಾಡಿದ್ದರಿಂದ ಸವಾರರು ಪರದಾಡುವಂತಾಗಿತ್ತು.
ಕರ್ನಾಟಕದ 23 ನೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಗುರುವಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರಿಂದ ಇಲ್ಲಿನ ಸುತ್ತಮುತ್ತಲಿನ ರಸ್ತೆಗಳಲ್ಲಿ ಬೆಳಗ್ಗೆ 8 ರಿಂದ ಎರಡು ಗಂಟೆಗಳಿಗೂ ಅಧಿಕ ಸಮಯ ವಾಹನ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಮೂಲಕ ಸಂಚಾರ ಮಾಡಬೇಕಾದವರಿಗೆ ಬದಲಿ ಮಾರ್ಗಗಳನ್ನು ಕಲ್ಪಿಸದ್ದರಿಂದ ಹೆಚ್ಚಿನ ಸಂಚಾರ ದಟ್ಟಣೆ ಕಂಡು ಬಂದಿತು.
ಬಹುಮತವಿಲ್ಲದ ಯಡಿಯೂರಪ್ಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದರಿಂದ ಸಾವಿರಾರು ಮಂದಿ ಪೊಲೀಸರನ್ನು ನಿಯೋಜಿಸಿ ರಾಜಭವನ ರಸ್ತೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.
ರಾಜಭವನ ಹಾಗೂ ವಿಧಾನಸೌಧದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ ನಿಗದಿತ ಸಮಯಕ್ಕೆ ಕಚೇರಿ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೂ ಹೋಗಬೇಕಾದ ಸಾರ್ವಜನಿಕರು ಪರದಾಡುವಂತಾಗಿತ್ತು. ಪ್ರಮಾಣವಚನ ಕಾರ್ಯಕ್ರಮ ಮುಗಿದ 1 ಗಂಟೆಯ ನಂತರ ರಾಜಭವನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಸಂಚಾರ ಸುಗಮಗೊಂಡಿತು