ರಾಜ್ಯಪಾಲರಿಂದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಆಸ್ಕರ್

ಉಡುಪಿ, ಮೇ 18: ರಾಜ್ಯಪಾಲರು ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರಕಾರ ರಚಿಸಲು ಅವಕಾಶ ನೀಡಿರುವುದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಹೇಳಿದ್ದಾರೆ.
ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ ಕಾರ್ಯಕರ್ತರ ಕೃತಜ್ಞತಾ ಸಮರ್ಪಣಾ ಸಭೆಯಲ್ಲಿ ಅವರು ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತಿದ್ದರು.
ಈ ನಿಟ್ಟಿನಲ್ಲಿ ರಾಜ್ಯಪಾಲರು ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿಯಲು ಬಹುಮತ ಹೊಂದಿರುವ ಮೈತ್ರಿಕೂಟಕ್ಕೆ ಸರಕಾರ ರಚಿಸಲು ಅವಕಾಶ ನೀಡಬೇಕಿತ್ತು ಎಂದವರು ಅಭಿಪ್ರಾಯಪಟ್ಟರು. ಸೋಲನ್ನು ಸವಾಲಾಗಿ ಸ್ವೀಕರಿಸಿ. ಮುಂದಿನ ದಿನಗಳಲ್ಲಿ ಬರುವ ಶಿಕ್ಷಕರ, ಪದವೀಧರ ಕ್ಷೇತ್ರದ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳಲ್ಲಿ ಕಾರ್ಯಕರ್ತರು ಸಂಘಟಿತರಾಗಿ ತೊಡಗಿಸಿಕೊಂಡು ಪಕ್ಷವನ್ನು ಮುನ್ನಡೆಸ ಬೇಕೆಂದು ಕಾರ್ಯರ್ತರಲ್ಲಿ ಆತ್ಮವಿಶ್ವಾಸ ತುಂಬಿದರು.
ಕರಾವಳಿ ಪ್ರದೇಶದ ಕಾಂಗ್ರೆಸ್ನ ಎಲ್ಲಾ ಶಾಸಕರು ಯಾವುದೇ ತಾರತಮ್ಯವಿಲ್ಲದೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ಬಿಜೆಪಿಯ ನಿರಂತರ ಅಪಪ್ರಚಾರದಿಂದ ಪಕ್ಷಕ್ಕೆ ಹಾಗೂ ತಮಗೆ ಹಿನ್ನಡೆ ಯಾಗಿದೆ. ಜನತೆ ಅತೀ ಶೀಘ್ರ ವಾಸ್ತವಿಕ ಅರಿವಿಗೆ ಬಂದು ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಬೆಂಬಲವನ್ನು ಸೂಚಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಕುಂದಾಪುರ ಕ್ಷೇತ್ರದ ಅಭ್ಯರ್ಥಿ ರಾಕೇಶ್ ಮಲ್ಲಿ ಮಾತನಾಡಿ ಇವಿಎಂ ಯಂತ್ರದ ಬಗ್ಗೆ ಆಕ್ಷೇಪವೆತ್ತಿದರು. ಚುನಾವಣೆಯಲ್ಲಿ ತನ್ನ ಹಿನ್ನಡೆಗೆ ಇವಿಎಂ ಕಾರಣವಾಗಿದೆ ಎಂದು ಅವುಗಳ ದೋಷದ ಬಗ್ಗೆ ಉದಾಹರಣೆಗಳನ್ನು ನೀಡಿ ವಿವರಿಸಿದರು. ಈ ಬಗ್ಗೆ ತಾನು ಈಗಾಗಲೇ ಚುನಾವಣಾ ಅಧಿಕಾರಿಗಳಿಗೆ ದೂರನ್ನು ದಾಖಲಿಸಿರುವುದಾಗಿ ಅವರು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಸಭೆಯು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎ.ಗಪೂರ್, ಮಾಜಿ ಶಾಸಕ ಯು.ಆರ್ ಸಭಾಪತಿ, ಗೀತಾ ವಾಗ್ಳೆ, ವೆರೋನಿಕಾ ಕರ್ನೇಲಿಯೋ, ದಿನೇಶ್ ಪುತ್ರನ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ದಿವಾಕರ ಕುಂದರ್, ಗಣೇಶ್ ಕೋಟ್ಯಾನ್, ಕೃಷ್ಣರಾಜ ಸರಳಾಯ, ಸರಳಾ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮುರಳಿ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ಸುಧಾಕರ ಕೋಟ್ಯಾನ್, ನವೀನ್ಚಂದ್ರ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಜನಾರ್ದನ ಭಂಡಾರ್ಕಾರ್, ಹರೀಶ್ ಶೆಟ್ಟಿ ಪಾಂಗಾಳ, ವಿಜಯ ಹೆಗ್ಡೆ ಸಿ, ಸುಧೀರ್ ಹೆಗ್ಡೆ, ಸತೀಶ್ ಅಮೀನ್ ಪಡುಕರೆ, ಮೈರ್ಮಾಡಿ ಸುಧಾಕರ ಶೆಟ್ಟಿ, ಮನೋಜ್ ಕರ್ಕೇರ, ಮಹಾಬಲ ಕುಂದರ್, ಮಾರ್ಕ್ ಡಿಸೋಜಾ, ಡಾ. ಸುನಿತಾ ಶೆಟ್ಟಿ, ಮಲ್ಲಿಕಾ ಪೂಜಾರಿ, ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಕಾರ್ಯ ಕ್ರಮ ನಿರ್ವಹಿಸಿ, ಕಾರ್ಯದರ್ಶಿ ಹರೀಶ್ ಕಿಣಿ ವಂದಿಸಿದರು.







