ದಲಿತರಿಗೆ ರಾಜಕೀಯ ಪ್ರಾತಿನಿಧ್ಯ ಅಗತ್ಯ: ಡಾ.ಎಂ.ಆರ್.ಕೇಶವ ಧರಣಿ

ಮಂಗಳೂರು, ಮೇ 27: ಶೋಷಿತ ಸಮುದಾಯವಾಗಿರುವ ದಲಿತರಿಗೆ ರಾಜಕೀಯ ಪ್ರಾತಿನಿಧ್ಯ ಅಗತ್ಯವಾಗಿದೆ ಎಂದು ಮಂಗಳೂರು ಕುದ್ಮುಲ್ ರಂಗರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಆರ್.ಕೇಶವ ಧರಣಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ)ಯ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನಗರದ ಪುರಭವನದಲ್ಲಿ ರವಿವಾರ ನಡೆದ ಸಂವಿಧಾನಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವಪು 127ನೆ ಜನ್ಮ ದಿನಾಚರಣೆ ಅಂಗವಾಗಿ ‘ಸಂವಿಧಾನ ಸಂರಕ್ಷಣಾ ದಿನ’ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ದಲಿತರು ಕೇವಲ ಚಪ್ಪಾಳೆ ತಟ್ಟುವುದಕ್ಕೆ ಸೀಮಿತವಾಗಬಾರದು. ರಾಜಕೀಯದಲ್ಲಿ ಪ್ರಾತಿನಿಧ್ಯ ಪಡೆಯಲು ಪ್ರಯತ್ನಿಸಬೇಕು. ದಲಿತರು ಅಧಿಕಾರದ ಚುಕ್ಕಾಣಿ ಹಿಡಿದರೆ ಮಾತ್ರಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದರು.ಶೈಕ್ಷಣಿಕ ಅಭಿವೃದ್ಧಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶೇಷವಾಗಿ ಒತ್ತು ನೀಡಿದ್ದರು. ಶಿಕ್ಷಣದಿಂದಲೇ ದಲಿತರ ಅಭಿವೃದ್ಧಿ ಸಾಧ್ಯ ಎಂದು ಅವರು ಮನಗಂಡಿದ್ದರು. ಈ ನಿಟ್ಟಿನಲ್ಲಿ ದಲಿತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಸಮುದಾಯದ ಜವಾಬ್ದಾರಿಯಾಗಿದೆ. ಶಿಕ್ಷಣದಿಂದ ದಲಿತ ಸಮುದಾಯದ ಯುವಕರು ತಮ್ಮ ಭವಿಷ್ಯ ರೂಪಿಸಿಕೊಳ್ಳ ಬಹುದು ಎಂದು ಕೇಶವ ಧರಣಿ ಹೇಳಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ)ಯ ರಾಜ್ಯ ಸಂಘಟನಾ ಸಂಚಾಲಕ ರಮೇಶ್ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ರಾಜ್ಯ ಸಂಚಾಲಕ ಗೋವಿಂದ ರಾಜ್, ಪ್ರಗತಿಪರ ಚಿಂತಕ ಹಾಗೂ ಉಪನ್ಯಾಸಕ ಡಾ.ವಾಸುದೇವ ಬೆಳ್ಳೆ, ಮನಪಾ ಆರೋಗ್ಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷೆ ಹಾಗೂ ಕಾರ್ಪೊರೇಟರ್ ನಾಗವೇಣಿ, ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ರಘುವೀರ್ ಸೂಟರ್ಪೇಟೆ, ದಲಿತ ಮುಖಂಡರಾದ ಸೇಸಪ್ಪ ಬೆದ್ರಕಾಡು, ಕೃಷ್ಣ ಕುಂದರ್. ಸುಂದರ ಮೇರ, ಸುಂದರ ಬೆಳುವಾಯಿ, ಸಂಜೇವ ಸೂಟರ್ಪೇಟೆ , ಚಂದ್ರ ಕುಮಾರ್, ಎಂ.ದೇವದಾಸ್, ಲಯನ್ ಎಂ.ಹರೀಶ್ ಆಳ್ವ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಮೊದಲಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಎಕ್ಕೂರಿನಿಂದ ನಗರದ ಪುರಭವನದವರೆಗೆ ಮೆರವಣಿಗೆ ನಡೆಯಿತು. ಪುರಭವದ ಮುಂಭಾಗದ ಅಂಬೇಡ್ಕರ್ ಅವರ ಪ್ರತಿಮೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ)ಯ ರಾಜ್ಯ ಸಂಚಾಲಕ ಗೋವಿಂದ ರಾಜ್ ಅವರು ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಐದು ಮಂದಿ ಸಾಧಕರಿಗೆ ಸನ್ಮಾನಿಸಲಾಯಿತು.ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ)ಯ ಮೈಸೂರು ವಿಭಾಗೀಯ ಸಂಚಾಲಕ ಅಶೋಕ್ ಕೊಂಚಾಡಿ ಸ್ವಾಗತಿಸಿದರು. ರಘುರಾಜ್ ಕದ್ರಿ ಕಾರ್ಯಕ್ರಮ ನಿರೂಪಿಸಿದರು.