ಮೈಸೂರಿಗೆ ಈಶ್ವರಪ್ಪ ರಹಸ್ಯ ಭೇಟಿ: ಚಾಮುಂಡೇಶ್ವರಿಯಲ್ಲಿ ಪೂಜೆ ಸಲ್ಲಿಕೆ
ಮೈಸೂರು,ಮೇ.31: ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ರಹಸ್ಯವಾಗಿ ಮೇಲುಕೋಟೆ, ಶ್ರೀರಂಗಪಟ್ಟಣ ಮತ್ತು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ವಿರುದ್ಧ ಮುನಿಸಿಕೊಂಡಿದ್ದಾರೆ ಎನ್ನಲಾದ ಶಾಸಕ ಈಶ್ವರಪ್ಪನವರು ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಗೆ ಗೈರು ಹಾಜರಾಗಿ ಯಾವುದೇ ಸಭೆ ಸಮಾರಂಭಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ನಿನ್ನೆಯೇ ಮೈಸೂರಿಗೆ ರಹಸ್ಯವಾಗಿ ಕುಟುಂಬ ಸಮೇತ ಆಗಮಿಸಿ ಮೇಲುಕೋಟೆ ಚೆಲುವರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಶ್ರೀರಂಗಪಟ್ಟಣಕ್ಕೆ ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ, ಹೋಮಾದಿಗಳನ್ನು ನಡೆಸಿ ರಾತ್ರಿ ನಗರದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಇಂದು ಬೆಳಗ್ಗೆ ಕುಟುಂಬ ಸಮೇತ ನಾಡ ಅಧಿದೇವತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೈಸೂರು ಭೇಟಿಯ ಬಗ್ಗೆ ಕೆಲವೇ ಕೆಲವು ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು, ಸಂಪೂರ್ಣವಾಗಿ ಮಾಧ್ಯಮದವರನ್ನು ಈ ಎಲ್ಲಾ ಕಾರ್ಯಕ್ರಮಗಳಿಂದ ದೂರ ಇಟ್ಟಿದ್ದರು ಎನ್ನಲಾಗಿದೆ