ಪರಿಸರ ಸ್ವಚ್ಛತೆ, ಸಂರಕ್ಷಣೆಯನ್ನು ಮನೆಯಿಂದಲೇ ಆರಂಭಿಸಿ: ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ
ವಿಶ್ವ ಪರಿಸರ ದಿನಾಚರಣೆ

ಮಡಿಕೇರಿ, ಜೂ.5: ಪರಿಸರ ಸ್ವಚ್ಚತೆ ಮತ್ತು ಸಂರಕ್ಷಣೆ ನಮ್ಮ ಮನೆ ಮತ್ತು ಕಚೇರಿಯಿಂದಲೇ ಆರಂಭವಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಮಂಗಳವಾರ ನಡೆದ ‘ವಿಶ್ವ ಪರಿಸರ ದಿನಾಚರಣೆ’ಯನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪರಿಸರ ಶುಚಿತ್ವ ಮತ್ತು ಸಂರಕ್ಷಣೆಯ ಮಹತ್ವದ ಬಗ್ಗೆ ಪ್ರತಿನಿತ್ಯವೂ ಅರಿವು ಇರಬೇಕು. ಕೇವಲ ಪರಿಸರ ದಿನಾಚರಣೆಯಂದು ಪರಿಸರ ಸಂರಕ್ಷಣೆ ಬಗ್ಗೆ ಹೇಳಿದರಷ್ಟೆ ಸಾಲದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ನ್ನು ಒಂದಲ್ಲ ಒಂದು ರೀತಿಯಲ್ಲಿ ಬಳಸುತ್ತೇವೆ. ಆದರೆ ಬಳಸಿದ್ದನ್ನು ಮರು ಬಳಕೆಗೆ ನೀಡುತ್ತಿಲ್ಲ. ಪ್ಲಾಸ್ಟಿಕ್ನ್ನು ಎಲ್ಲೆಂದರಲ್ಲಿ ಬಿಸಾಡುವುದು, ಒಲೆಗೆ ಉಪಯೋಗಿಸುವುದು ಸರಿಯಲ್ಲ. ಮಿಲಿಯನ್ ವರ್ಷವಾದರೂ ಪ್ಲಾಸ್ಟಿಕ್ ತನ್ನ ಸ್ಥಿತಿಯನ್ನು ಕಳೆದುಕೊಳ್ಳುವುದಿಲ್ಲ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ಮಾಡಬಾರದು, ಬಟ್ಟೆ ಬ್ಯಾಗನ್ನು ಉಪಯೋಗಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನುಡಿದರು.
ಪ್ಲಾಸ್ಟಿಕ್ ಬಳಿಕೆಯಿಂದ ಒಂದು ರೀತಿ ಭೂಮಿಗೆ ಭಾರವಿದ್ದಂತೆ, ವಾತಾವರಣವನ್ನು ಸ್ವಚ್ಚವಾಗಿಡಲು ಪ್ಲಾಸ್ಟಿಕ್ನಿಂದ ದೂರವಿರಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ ಪ್ರವಾಸಿ ಕೇಂದ್ರಗಳು, ಹೋಂಸ್ಟೇ, ರೆಸಾರ್ಟ್, ಹೋಟೆಲ್ಗಳು ಸೇರಿದಂತೆ ಎಲ್ಲಿಯೂ ಸಹ ಪ್ಲಾಸ್ಟಿಕ್ ಬಳಸಬಾರದು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಹಸಿ ಕಸ ಮತ್ತು ಒಣ ಕಸನ್ನು ಬೇರ್ಪಡಿಸಿ ನೀಡಬೇಕು. ಬದಲಾವಣೆ ನಮ್ಮಿಂದಲೇ ಆಂಭವಾದಾಗ ಮಾತ್ರ ಪರಿಸರ ಸ್ವಚ್ಚತೆ ಕಾಪಾಡಲು ಸಾಧ್ಯ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ, ವಿಶ್ವದಲ್ಲಿ 100 ಮಿಲಿಯನ್ ಟನ್ಗಳಷ್ಟು ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದ್ದು, 7 ಸಾವಿರ ಟನ್ರಷ್ಟು ಪ್ಲಾಸ್ಟಿಕ್ ತ್ಯಾಜ್ಯವಾಗುತ್ತಿದೆ. ಇದು ಹಳ್ಳಕೊಳ್ಳ, ಕಾಲುವೆ, ನದಿ, ಸಮುದ್ರ ಸೇರಿ ಇಡೀ ಜೀವಜಲದ ಪ್ರಾಣವನ್ನೇ ಹಿಂಡುತ್ತಿದೆ ಎಂದು ತಿಳಿಸಿದರು.
ಪ್ರಾಣಿ, ಪಕ್ಷಿ ಸೇರಿದಂತೆ ಜೀವಜಲಗಳು ಉಳಿಯಬೇಕಾದರೆ ಪ್ಲಾಸ್ಟಿಕ್ ಬಳಸಬಾರದು, ಮುಂದಿನ ಪೀಳಿಗೆಗೆ ಹಸಿರು, ಶುದ್ಧಗಾಳಿ, ಶುದ್ಧ ಕುಡಿಯುವ ನೀರು ಪಡೆಯಲು ಪ್ಲಾಸ್ಟಿಕ್ ಬಳಕೆಯಿಂದ ದೂರವಿರಬೇಕು. ಇಲ್ಲದಿದ್ದಲ್ಲಿ ಜೀವನಕ್ಕೆ ದುಸ್ತರವಾಗಲಿದೆ ಎಂದು ನೂರುನ್ನೀಸ ಅವರು ಎಚ್ಚರಿಸಿದರು. ಬಂಗಾರ ಕೂಡಿಡುವ ಬದಲು, ಪರಿಸರ, ಅರಣ್ಯ ಸಂರಕ್ಷಣೆ ಮಾಡಿದ್ದಲ್ಲಿ ನಮ್ಮ ಮತ್ತು ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬರಲ್ಲಿಯೂ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಇರಬೇಕು. ಪ್ಲಾಸ್ಟಿಕ್ನ್ನು ಸಂಪೂರ್ಣವಾಗಿ ತೊಲಗಿಸಬೇಕು. ಹಸಿರುಮಯ ವಾತಾವರಣ ನಿರ್ಮಾಣ ಮಾಡಬೇಕು ಎಂದು ನೂರುನ್ನೀಸ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ಪ್ರತಿ ವರ್ಷ ಜಿಲ್ಲೆಗೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಜೊತೆಗೆ ಪ್ಲಾಸ್ಟಿಕನ್ನು ತರುತ್ತಾರೆ. ಈ ಪ್ಲಾಸ್ಟಿಕ್ನ್ನು ಮರು ಬಳಕೆ ಮಾಡುವಂತಾಗಲು ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಸಲಹೆ ನೀಡಿದರು.
ಮರಗಿಡಗಳು ಇಲ್ಲದಿದ್ದರೆ ಬದುಕು ಅಸಾಧ್ಯ. ಪರಿಸರವನ್ನು ಸದಾ ರಕ್ಷಣೆ ಮಾಡಬೇಕು. ನದಿ, ಜಲವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಿದೆ ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್.ಮಂಜುನಾಥ್ ಅವರು ಮಾತನಾಡಿ ಅರಣ್ಯ ಮತ್ತು ಪರಿಸರ ಸಂಪತ್ತು ಸಂರಕ್ಷಣೆಯಾದಲ್ಲಿ ಮಾತ್ರ ಕಾಲ ಕಾಲಕ್ಕೆ ಮಳೆ, ಬೆಳೆ ಕಾಣಬಹುದು ಎಂದು ಹೇಳಿದರು.
ಅರಣ್ಯ ಇಲಾಖೆ ವತಿಯಿಂದ ಗಿಡಗಳನ್ನು ವಿತರಿಸಲಾಗುತ್ತಿದ್ದು, ಇವುಗಳನ್ನು ಪೋಷಣೆ ಮಾಡಿದ್ದಲ್ಲಿ ಪ್ರೋತ್ರಾಹಧನ ನೀಡಲಾಗುವುದು, ಜೊತೆಗೆ ಪರಿಸರ ದಿನಾಚರಣೆ ಪ್ರಯುಕ್ತ ಶಾಲಾ-ಕಾಲೇಜುಗಳಿಗೆ ವಿತರಿಸಲಾಗಿರುವ ಗಿಡಗಳನ್ನು ಸಮರ್ಪಕವಾಗಿ ಸಂರಕ್ಷಣೆ ಮಾಡಿದ್ದಲ್ಲಿ ಅಂತಹ ಶಾಲಾ-ಕಾಲೇಜುಗಳಿಗೆ ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಉಪಾಧ್ಯಕ್ಷರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್ ಮಾತನಾಡಿದರು.
ಪರಿಸರ ಸಂರಕ್ಷಣೆ ಕುರಿತು ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಂಯೋಜಕರಾದ ಟಿ.ಜಿ.ಪ್ರೇಮಕುಮಾರ್ ಅವರು ‘ಭೂಮಿಯ ಅತ್ಯಮೂಲ್ಯ ಸಂಪನ್ಮೂಲವನ್ನು ಮಿತವಾಗಿ ಬಳಸೋಣ, ಮುಂದಿನ ಪೀಳಿಗೆಗಾಗಿ ಸಂರಕ್ಷಿಸೋಣ, ಪರಿಸರದೊಂದಿಗೆ ಉತ್ತಮ ಬಾಂಧವ್ಯ ಸಾಧಿಸಿ ಬದುಕು ಕಟ್ಟಿಕೊಳ್ಳೋಣ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳೊಣ, ಹಸಿರಾಗಿಸೋಣ, ಪ್ಲಾಸ್ಟಿಕ್ ಮುಕ್ತವಾಗಿಸೋಣ ಮತ್ತು ಪರಿಸರ ಸಂರಕ್ಷಿಸೋಣ ಎಂಬ ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ಜಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಿ.ಕೆಂಚಪ್ಪ, ತಹಶೀಲ್ದಾರರಾದ ಶಾರದಾಂಭ ಇತರರು ಹಾಜರಿದ್ದರು.
ಪರಿಸರ ಸಂರಕ್ಷಣೆ ಮತ್ತು ಮಹತ್ವ ಕುರಿತು ಶಾಲಾ-ಕಾಲೇಜುಗಳಲ್ಲಿ ಏರ್ಪಡಿಸಲಾಗಿದ್ದ ಪ್ರಬಂಧ, ಚಿತ್ರಕಲೆ ಹಾಗೂ ಘೋಷ ವಾಕ್ಯ ಬರೆಯುವ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಮಹತ್ವ ಕುರಿತು ನಾಟಕ ಪ್ರದರ್ಶನ ಮಾಡಿ ಗಮನ ಸೆಳೆದರು.
ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪರಿಸರ ಸಂರಕ್ಷಣೆ ಕುರಿತು ಹಾಡು ಹಾಡಿದರು. ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯರು ನಾಡಗೀತೆ ಹಾಡಿದರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಅವರು ನಿರೂಪಿಸಿ, ವಂದಿಸಿದರು.







