ಕುಮಾರಸ್ವಾಮಿಯವರನ್ನೇ ಕೇಳಿ: ಸಿದ್ದರಾಮಯ್ಯ
'ಇನ್ನೊಂದು ವರ್ಷ ನಾನೇ ಸಿಎಂ' ಎಂಬ ಮುಖ್ಯಮಂತ್ರಿ ಹೇಳಿಕೆ

ಮಂಗಳೂರು, ಜೂ.16: ಇನ್ನೊಂದು ವರ್ಷ ನಾನೇ ಸಿಎಂ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಯ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಆ ಬಳಿಕ ದಣಿವರಿಯದ ಓಡಾಟದಿಂದ ಕೊಂಚ ವಿಶ್ರಾಂತಿ ಪಡೆಯಲು ಧರ್ಮಸ್ಥಳದಲ್ಲಿರುವ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಲು ಶನಿವಾರ ರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.
ಬೆಂಗಳೂರಿನಿಂದ ವಿಮಾನದ ಮೂಲಕ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ‘ದೆಹಲಿಯಲ್ಲಿ ಕುಮಾರಸ್ವಾಮಿ ಯಾವ ಅರ್ಥದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ಎಂದರಲ್ಲದೆ, ನನಗೆ ಯಾವುದೇ ಕಾಯಿಲೆಗಳಿಲ್ಲ. ದೇಹದ ಆರೋಗ್ಯ ಸ್ಥಿರತೆಗಾಗಿ ಪ್ರಕೃತಿ ಚಿಕಿತ್ಸೆಗೆ ಬಂದಿದ್ದೇನೆ. 10 ದಿನ ಅಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ತಿಳಿಸಿದರು.
ಸಚಿವೆ ಜಯಮಾಲಾ ಅವರನ್ನು ವಿಧಾನಸಭಾ ನಾಯಕಿಯನ್ನಾಗಿ ಮಾಡುವುದನ್ನು ವಿರೋಧಿಸಿ ಉಗ್ರಪ್ಪ, ಎಚ್.ಎಂ. ರೇವಣ್ಣ ಪತ್ರ ಬರೆದಿದ್ದಾರೆ ಎಂಬುದು ಸುಳ್ಳು ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮತ್ತಿತರರು ಸ್ವಾಗತಿಸಿದರು.