ದಿಲ್ಲಿ ಸಮಸ್ಯೆ ಬಗೆಹರಿಸಲು ನಾಲ್ವರು ಮುಖ್ಯಮಂತ್ರಿಗಳ ಆಗ್ರಹ
ಹೊಸದಿಲ್ಲಿ, ಜೂ.17: ದಿಲ್ಲಿ ಸರ್ಕಾರದ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಪಡಿಸುವಂತೆ ನಾಲ್ಕು ರಾಜ್ಯಗಳ ಬಿಜೆಪಿಯೇತರ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.
ನೀತಿ ಆಯೋಗದ ನಾಲ್ಕನೇ ಸಾಮಾನ್ಯ ಮಂಡಳಿ ಸಭೆಯ ವೇಳೆ ಪ್ರಧಾನಿಯನ್ನು ಭೇಟಿ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಆಗ್ರಹ ಮಂಡಿಸಿದ್ದಾರೆ. ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿ ಮುಂದೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಡೆಸುತ್ತಿರುವ ಧರಣಿಗೆ ಈ ಮುಖ್ಯಮಂತ್ರಿಗಳು ಬೆಂಬಲ ಸೂಚಿಸಿದ್ದಾರೆ.
ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಕೆಲವು ಮುಖ್ಯಮಂತ್ರಿಗಳು ಪ್ರಧಾನಿ ಮೋದಿ ಅಧ್ಯಕ್ಷತೆಯ ಈ ಸಭೆಯಲ್ಲಿ ಭಾಗವಹಿಸಲಿಲ್ಲ. ಐಎಎಸ್ ಅಧಿಕಾರಿಗಳು ಕೇಜ್ರಿವಾಲ್ ಸರ್ಕಾರದ ವಿರುದ್ಧದ ಅಸಹಕಾರ ನೀತಿಯನ್ನು ಕೈಬಿಡಬೇಕು ಎಂದು ನಾಲ್ವರು ಮುಖ್ಯಮಂತ್ರಿಗಳು ಆಗ್ರಹಿಸಿದರು. ಇವರು ಕೇಜ್ರಿ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.