ನೂತನ ಶಾಸಕಿ ಸೌಮ್ಯಾರೆಡ್ಡಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಜೂ.18: ಜಯನಗರ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಸೌಮ್ಯಾರೆಡ್ಡಿ ಸೋಮವಾರ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ತಮ್ಮ ಕಚೇರಿಯಲ್ಲಿ ನೂತನ ಶಾಸಕಿಗೆ ಅಧಿಕಾರ ಮತ್ತು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸೌಮ್ಯಾರೆಡ್ಡಿ ಅವರ ತಾಯಿ ಚಾಮುಂಡೇಶ್ವರಿ ಹಾಗೂ ಸಹೋದರ ಉಪಸ್ಥಿತರಿದ್ದರು. ಆದರೆ, ಅವರ ತಂದೆ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
ನೂತನ ಶಾಸಕರಿಗೆ ತರಬೇತಿ: ನೂತನ ಶಾಸಕರಿಗೆ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಮೂರು ದಿನ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ಭವನದಲ್ಲಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ಶಾಸಕರಲ್ಲದವರು ಯಾರೂ ಶಾಸಕರ ಭವನದಲ್ಲಿ ಉಳಿಯುವಂತಿಲ್ಲ ಎಂದರು. ಶಾಸಕರಲ್ಲದವರ ಕಾರುಗಳನ್ನು ನಿಲುಗಡೆ ಮಾಡುವಂತಿಲ್ಲ. ಈ ಕ್ಷಣದಿಂದಲೇ ನಿಯಮಾವಳಿ ಜಾರಿಗೊಳಿಸಲಾಗುತ್ತದೆ ಎಂದು ರಮೇಶ್ಕುಮಾರ್ ಹೇಳಿದರು.





