ಚಿಕ್ಕಮಗಳೂರು: ಮೀಸಲಾತಿ ಪ್ರಮಾಣ ಹೆಚ್ಚಿಸಲು ಒತ್ತಾಯಿಸಿ ಮನವಿ

ಚಿಕ್ಕಮಗಳೂರು ಜೂ.18 ಪರಿಶಿಷ್ಟ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸುವಂತೆ ವಾಲ್ಮೀಕಿ ಸಮುದಾಯದ ಸದಸ್ಯರು ಶಾಸಕ ಸಿ.ಟಿ.ರವಿ ಅವರಿಗೆ ಮನವಿ ಮಾಡಿದೆ.
ಸಮಾಜದ ಮುಖಂಡ ನಂದೀಶ್ ಮದಕರಿ ಅವರ ನೇತೃತ್ವದಲ್ಲಿ ಶಾಸಕ ಸಿ.ಟಿ.ರವಿ ಅವರನ್ನು ಅವರ ಗೃಹಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿದ ಸಮುದಾಯದವರು ಈ ಸಂಬಂಧ ಮನವಿ ಸಲ್ಲಿಸಿದರು. ಪರಿಶಿಷ್ಠ ವರ್ಗದವರು ರಾಜ್ಯದಲ್ಲಿ ಶೇ10 ರಷ್ಟು ಜನಸಂಖ್ಯೆ ಹೊಂದಿದ್ದು, ರೈತರು ಮತ್ತು ಕೂಲಿ ಕಾರ್ಮಿಕರಾಗಿ ಬಡತನದಲ್ಲಿ ಬದುಕು ಸಾಗಿಸುತ್ತಿದ್ದಾರೆ, ರಾಜ್ಯ ಸರ್ಕಾರ ನೀಡುತ್ತಿರುವ ಶೇ 3 ರಷ್ಟು ಮೀಸಲಾತಿ ಆ ಸಮುದಾಯಗಳಿಗೆ ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಬೆಳೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸಮಾಜದ ಮುಖ್ಯವಾಹಿನಿಗೆ ಬರಲು, ಅಭಿವೃದ್ದಿ ಹೊಂದಲು ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ಕೇಂದ್ರ ಸರ್ಕಾರ ಪರಿಶಿಷ್ಠ ವರ್ಗಗಳಿಗೆ ಶೆ 7.5 ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯ ಸರ್ಕಾರ ಸಹ ಅದೇ ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದ ಅವರು ಇದರಿಂದಾಗಿ ಹಿಂದುಳಿದ ಸಮುದಾಯಗಳು ಉದ್ಯೋಗ, ರಾಜಕೀಯ ಮತ್ತು ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಮೂಲಕ ರಾಜ್ಯ ಸರಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದರು.
ಮನವಿಗೆ ಪ್ರತಿಕ್ರಿಯಿಸಿದ ಶಾಸಕ ಸಿ.ಟಿ.ರವಿ ಈಗಾಗಲೇ ತಾವು ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಮುಂದೆಯೂ ಸಹ ಚರ್ಚಿಸುವುದಾಗಿ ಭರವಸೆ ನೀಡಿದರು.
ಸಮುದಾಯದ ವತಿಯಿಂದ ಇದೇ ವೇಳೆ ಶಾಸಕರನ್ನು ಸನ್ಮಾನಿಸಲಾಯಿತು. ಸಮಾಜದ ಮುಖಂಡರಾದ ಗುಡ್ಡದನಾಯಕ, ಪುಟ್ಟಸ್ವಾಮಿ, ರಾಜಪ್ಪ, ಜಗದೀಶ, ಪರಮೇಶ, ರಾಜು ಮತ್ತಿತರರು ಉಪಸ್ಥಿತರಿದ್ದರು.







