ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಅತ್ಯಂತ ಅವಶ್ಯಕ: ಚಿಕ್ಕಮಗಳೂರು ಡಿ.ಸಿ ಶ್ರೀರಂಗಯ್ಯ

ಚಿಕ್ಕಮಗಳೂರು,ಜೂ.19: ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಅತ್ಯಂತ ಸಹಕಾರಿ. ಪ್ರತಿಯೊಬ್ಬರು ಯೋಗವನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇಡಲು ಯೋಗ ಅತ್ಯಂತ ಸಹಕಾರಿಯಾಗಿದ್ದು, ಆಧುನಿಕ ಈ ಯುಗದಲ್ಲಿ ಒತ್ತಡದ ಜೀವನದಿಂದಾಗಿ ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತಿದೆ ಇವುಗಳ ನಿಯಂತ್ರಣಕ್ಕೆ ಯೋಗ ಅತ್ಯಂತ ಹೆಚ್ಚು ಸಹಕಾರಿಯಾಗಲಿದೆ ಎಂದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ಹೆಚ್ಚು ಪ್ರಸಿದ್ಧಿ ಪಡೆಯುತ್ತಿದೆ. ಆದರೆ ಸ್ಥಳೀಯವಾಗಿ ಹೆಚ್ಚು ಪ್ರಚಲಿತವಾಗಬೇಕು ಎಂದ ಅವರು ಯೋಗದ ಮಹತ್ವದ ಬಗ್ಗೆ ಜನ ಸಮಾನ್ಯರಿಗೆ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಂದು ಬೆಳಿಗ್ಗೆ 06.00 ಗಂಟೆಗೆ ಸಾಮೂಹಿಕ ಯೋಗಾಭ್ಯಾಸ ನಂತರ 7 ಗಂಟೆಗೆ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಭಾ ಕಾರ್ಯಕ್ರಮದಲ್ಲಿ ಯೋಗಾಭ್ಯಾಸದ ಕುರಿತು ಆಗುವ ಅನುಕೂಲದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದ ಅವರು ಜಿಲ್ಲೆಯ ಉತ್ತಮ ಯೋಗ ಪಟುಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದರು.
ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 20 ರಂದು ಬೆಳಿಗ್ಗೆ 10.00 ಗಂಟೆಗೆ ನಗರದ ತಾಲೂಕು ಕಚೇರಿಯಿಂದ ಜಿಲ್ಲಾ ಆಟದ ಮೈದಾನದವರೆಗೆ ಯೋಗದ ಬಗ್ಗೆ ಜಾಗೃತಿ ಮೂಡಿಸುವ ಕಾಲ್ನಡಿಗೆ ಜಾಥವು ನಡೆಯಲಿದೆ ಎಂದು ಹೇಳಿದರು. ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದ ಅವರು ಕಾರ್ಯಕ್ರಮಕ್ಕೆ ಶಿಷ್ಟಚಾರದಂತೆ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲು ಕ್ರಮವಹಿಸಬೇಕು ಎಂದರು.
ಯೋಗದ ಬಗ್ಗೆ ಅರಿವು ಮೂಡಿಸಲು ತಾಲೂಕುಗಳಲ್ಲಿ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಕುಮಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನಪ್ಪ, ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ.ಎಸ್, ಈಶ್ವರಿ ಬ್ರಹ್ಮಕುಮಾರಿ ಸಮಾಜದ ಬಿ.ಕೆ.ಭಾಗ್ಯ, ಪ್ರಬೋಧಿನಿ ಯೋಗ ಸಂಸ್ಥೆಯ ಶಿವಪ್ಪ, ಎಸ್.ಡಿ.ಎಮ್ನ ಡಾ.ಕುಸುಮ ಹಾಗೂ ಮತ್ತಿತರರು ಉಪಸ್ಥಿತರಿದ್ದರು.







