ತೆಂಕನಿಡಿಯೂರು ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

ಉಡುಪಿ, ಜೂ.26: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2018-19ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮವನ್ನು ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಕಲಿಕೆಯ ಬಗ್ಗೆ ಸಕಾರಾತ್ಮಕ ಮನಸ್ಥಿತಿಯನ್ನು ಬೆಳೆಸಿಕೊಂಡು ಸ್ಪರ್ಧಾತ್ಮಕ ಮನೋಭಾವ ದಿಂದ ವಿದ್ಯಾರ್ಜನೆ ಮಾಡಿದರೆ ಯಶಸ್ಸು ಸಿಗುತ್ತದೆ ಎಂದರು.
ಕಾಲೇಜಿಗೆ ಒಳ್ಳೆಯ ಹೆಸರು ಬರಬೇಕಾದರೆ ಪರಿಣಾಮಕಾರಿಯಾದ ಕ್ಯಾಂಪಸ್ ಶಿಸ್ತು ಹಾಗೂ ಉತ್ತಮ ಫಲಿತಾಂಶಗಳು ಅತ್ಯಗತ್ಯ. ಇವುಗಳನ್ನು ಸಾಕಾರಗೊಳಿಸುವುದರಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದವರು ನುಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಟೈಮ್ ಸಂಸ್ಥೆಯ ರೀಜನಲ್ ಮ್ಯಾನೇಜರ್ ಅರುಣ್ ಗುಂಡ್ಮಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಉದ್ಯೋಗ ಮಾಹಿತಿಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಯಾಗಿ ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕ ಪ್ರೊ.ಮಹೇಶ್ ರಾವ್ ಭಾಗವಹಿಸಿದ್ದರು. ತಾಪಂ ಸದಸ್ಯ ಶರತ್ ಕುಮಾರ್, ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಲೆ ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ್ ಸ್ವಾಗತಿಸಿ, ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸುರೇಶ್ ರೈ ಪ್ರಾಸ್ತಾವಿಕ ಮಾತನಾಡಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಉಮೇಶ್ ಪೈ ವಂದಿಸಿದರು. ಕನ್ನಡ ಸಹ ಪ್ರಾಧ್ಯಾಪಕ ಪ್ರೊ. ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು.