ಕಂದಾವರ: ದಾಸ್ತಾನಿರಿಸಿದ್ದ 124 ಲೋಡ್ ಅಕ್ರಮ ಮರಳು ವಶ
ಸಿಸಿಬಿ ಪೊಲೀಸರ ಕಾರ್ಯಾಚರಣೆ
ಮಂಗಳೂರು, ಜೂ.27: ಕಂದಾವರ ಗ್ರಾಮದ ಕಂದಾವರ ಪದವು ಹಾಗೂ ತೆಂಕ ಉಳಿಪಾಡಿಯ ಪೊಳಲಿದ್ವಾರದ ಬಳಿ ಖಾಸಗಿ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ ಸುಮಾರು 124 ಲೋಡ್ಗಳಷ್ಟು ಮರಳನ್ನು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಮರಳು ದಾಸ್ತಾನಿನ ಮೌಲ್ಯ 6,20,000 ರೂ. ಎಂದು ಅಂದಾಜಿಸಲಾಗಿದೆ. ಅಕ್ರಮ ಮರಳನ್ನು ದಾಸ್ತಾನು ಇರಿಸಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ವಶಪಡಿಸಿಕೊಂಡ ಮರಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಹಾಗೂ ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ನಿರ್ದೇಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪಆಯುಕ್ತ ಹನುಮಂತರಾಯ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈ ಶ್ಯಾಮ್ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿ ಮತ್ತು ಬಜ್ಪೆ ಠಾಣಾ ಪೊಲೀಸರು ನಡೆಸಿದ್ದರು.
ಈ ಕುರಿತು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.