ಮಾದಕದ್ರವ್ಯ ಬಳಕೆ ವಿರೋಧಿ ಕುರಿತ ಜಾಗೃತಿ ಕಾರ್ಯಾಗಾರ

ಉಡುಪಿ, ಜು. 2: ಉಡುಪಿ ಜಿಲ್ಲಾ ಎನ್ಎಸ್ಯುಐ ವತಿಯಿಂದ ಮಾದಕ ವಸ್ತುಗಳ ಬಳಕೆ ವಿರೋಧಿ ಕುರಿತ ಜಾಗೃತಿ ಕಾರ್ಯಾಗಾರವನ್ನು ಉಡುಪಿ ಸೈಂಟ್ ಸಿಸಿಲಿಸ್ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸ ಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಮನೋರೋಗ ತಜ್ಞ ಡಾ.ಪಿ.ವಿ.ಭಂಡಾರಿ ಮಾತನಾಡಿ, ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದೆ. ಅದರಲ್ಲಿ ಮುಖ್ಯವಾಗಿ ನಗರ ಪ್ರದೇಶದ ಯುವಕರು ಇಂತಹ ದುಶ್ಚಟಗಳಿಗೆ ಹೆಚ್ಚಾಗಿ ಬಲಿಯಾಗು ತ್ತಿರುವುದು ಕಂಡುಬರುತ್ತದೆ. ಮಾದಕ ದ್ರವ್ಯ ಬಳಕೆ ಅಪಾಯಕಾರಿಯಾಗಿದ್ದು, ಇದು ಕ್ಯಾನ್ಸರ್ನಂತಹ ಮಾರಣಾಂತಿಕ ಕಾಯಿಲೆಗೆ ದೂಡುವ ಜೊತೆಗೆ ಮನುಷ್ಯರನ್ನು ಅಧೀರರನ್ನಾಗಿಸುತ್ತದೆ. ಮಾದಕ ವಸ್ತುಗಳ ಬಳಕೆ ಸಂಪೂರ್ಣ ನಿರ್ಮೂಲನೆ ಮಾಡಿ, ಸಮಾಜದಲ್ಲಿ ಒಳ್ಳೆಯ ವಾತಾವರಣ ಸೃಷಿಸಬೇಕಾಗಿದೆ ಎಂದರು.
ಎನ್ಎಸ್ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಮಾತನಾಡಿ, ಇಂದಿನ ಕೆಲ ಯುವಜನತೆ, ಮಕ್ಕಳು ಮಾದಕ ವ್ಯಸನಿಗಳಾಗುತ್ತಿದ್ದು, ತಮ್ಮ ಸುಂದರ ಜೀವನವನ್ನೇ ಬಲಿಕೊಡುತ್ತಿದ್ದಾರೆ. ಇದರಿಂದ ಅವರ ಇಡೀ ಕುಟುಂಬ ಕೂಡ ನೋವಿನಲ್ಲಿ ನರಳುವಂತೆ ಮಾಡುತ್ತಿದ್ದಾರೆ. ಈ ಬಗ್ಗೆ ಬೃಹತ್ಡ್ ಮಟ್ಟದಲ್ಲಿ ಜಾಗೃತಿ ಮೂಡಿಸುವ ಆಂದೋಲನವಾಗಬೇಕು. ಯಾರೂ ಕೂಡ ಮಾದಕ ವ್ಯಸನಿಗಳಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಗ್ರೇಸಿ, ಎನ್ಎಸ್ಯುಐ ರಾಜ್ಯ ಸಮಿತಿ ಕಾರ್ಯದರ್ಶಿ ಫಾರೂಕ್, ಜಿಲ್ಲಾಧ್ಯಕ್ಷ ಕ್ರಿಸ್ಟನ್ ಡಿಆಲ್ಮೇಡಾ, ನಾಯಕರಾದ ನಬೀಲ್ ಉದ್ಯಾವರ, ನೀರಜ್ ಪಾಟೀಲ್, ಹರ್ಷಿತ್ ಆಚಾರ್ಯ, ವಿಶಾಕ್, ನಿತೇಶ್, ದೇವದಾಸ್ ಮೊದಲಾದವರು ಉಪಸ್ಥಿತರಿದ್ದರು.







