ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ, ಸೂಕ್ಷ್ಮವಾಗಿ ಕರ್ತವ್ಯ ನಿರ್ವಹಿಸಿ: ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚನೆ

ಮಡಿಕೇರಿ, ಜು.20: ಅಧಿಕಾರಿಗಳು ಸ್ಥಳೀಯ ಸಮಸ್ಯೆಗಳನ್ನು ಅರಿತು ಸೂಕ್ಷ್ಮವಾಗಿ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಗುರುವಾರ ಮಾಹಿತಿ ಪಡೆದು ಮುಖ್ಯಮಂತ್ರಿ ಅವರು ಮಾತನಾಡಿದರು. ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಿದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದರು. ರಾಜ್ಯದ ಹಲವು ಭಾಗಗಳಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ಅವುಗಳನ್ನು ತಿಳಿದು ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದ ಆಶಯಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.
ಮಳೆಯಿಂದ ಹಾನಿಯಾಗಿರುವ ರಸ್ತೆ, ಸೇತುವೆ, ವಾಸದ ಮನೆ, ಬೆಳೆಹಾನಿ, ವಿದ್ಯುತ್, ಹಾಗೆಯೇ ಸರ್ಕಾರಿ ಕಟ್ಟಡಗಳು ನಷ್ಟ ಸಂಬಂಧಿಸಿದಂತೆ ಈಗಾಗಲೇ ಸುಮಾರು 326 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜು ಮಾಡಲಾಗಿದೆ. ಪರಿಹಾರ ಸಂಬಂಧ ಅಗತ್ಯ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ, ಸೇತುವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಳೆಯಿಂದ ಹಾನಿಯಾಗಿರುವುದನ್ನು ಸರಿಪಡಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಸರ್ಕಾರಕ್ಕೆ ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಅವರು ಸೂಚಿಸಿದರು.
ಜೂನ್, ಜುಲೈ ಎರಡು ತಿಂಗಳು ಕೃಷಿ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ತೆರಳಿ ರೈತರಿಗೆ ಸಲಹೆ, ಮಾರ್ಗದರ್ಶನ ಹಾಗೂ ನೆರವು ನೀಡಬೇಕು. ಈ ಎರಡು ತಿಂಗಳುಗಳನ್ನು ಗಂಭೀರವಾಗಿ ಪರಿಗಣಿಸಿ ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.
ಮಳೆಯಿಂದ ಹಾನಿಯಾಗಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಹೆಚ್ಚಿನ ನಿಬಂಧನೆಗಳನ್ನು ಹಾಕದೆ, ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಅವರು ಸಲಹೆ ಮಾಡಿದರು.
ಕಾಫಿ ಬೆಳೆಗಾರರಿಗೆ ಪರಿಹಾರ ವಿತರಣೆ ಮಾಡಬೇಕು. ಮಳೆಯಿಂದಾಗಿರುವ ನಷ್ಟ ಸಂಬಂಧ ಕಾಫಿ ಬೆಳೆಗಾರರನ್ನು ರಕ್ಷಣೆ ಮಾಡಬೇಕು. ಪರಿಸರ ಸಂರಕ್ಷಣೆಯು ಸಹ ಮಾಡಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಮಳೆಹಾನಿ ಪರಿಹಾರ ಸಂಬಂಧಿಸಿದಂತೆ ತಹಶೀಲ್ದಾರರು ನೇರವಾಗಿ ಪರಿಹಾರ ವಿತರಣೆ ಮಾಡುವಂತಾಗಬೇಕು. ಉಪ ವಿಭಾಗಾಧಿಕಾರಿಯವರ ನೇತೃತ್ವದಲ್ಲಿ ಸಮಿತಿ ಅಗತ್ಯವಿಲ್ಲ ಎಂದು ಅವರು ಸಲಹೆ ಮಾಡಿದರು. ಇದಕ್ಕೆ ಧ್ವನಿಗೂಡಿಸಿದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, 'ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರು ಶೀಘ್ರದಲ್ಲಿ ಮಳೆಯಿಂದ ಹಾನಿಯಾಗಿರುವ ಮನೆಗಳ ಕುಟುಂಬದವರಿಗೆ ಪರಿಹಾರ ವಿತರಣೆ ಮಾಡಬೇಕು. ಅಂಗನವಾಡಿ, ಶಾಲಾ ಕಟ್ಟಡಗಳ ರಿಪೇರಿಗೆ ಹಣ ಬಿಡುಗಡೆ ಮಾಡಲಾಗುವುದು. ಈ ಸಂಬಂಧ ಪಟ್ಟಿಯನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಥಮ ದರ್ಜೆ ಕಾಲೇಜುಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪ್ರೌಢಶಾಲೆಗಳಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ. ಆ ನಿಟ್ಟಿನಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೂ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ನೂತನ ಭವನ ನಿರ್ಮಾಣ ಕಾಮಗಾರಿಯನ್ನು ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಎಚ್.ಡಿ.ರೇವಣ್ಣ ಅವರು ಸಲಹೆ ಮಾಡಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಕೊಡವ ಹೆರಿಟೇಜ್ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು ಮಾತನಾಡಿ ಕೊಡವ ಹೆರಿಟೇಜ್ ಕಟ್ಟಡ ಸಂಬಂಧ ಗಂಭೀರವಾಗಿ ಪರಿಗಣಿಸಲಾಗುವುದು, ಈ ಸಂಬಂಧ ವರದಿ ಕಳುಹಿಸಿಕೊಡುವಂತೆ ಲೋಕೋಪಯೋಗಿ ಇಲಾಖೆಯ ಇಇಗೆ ಸೂಚನೆ ನೀಡಿದರು.
ಕೆ.ಜಿ.ಬೋಪಯ್ಯ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಆದರೆ ಮಡಿಕೇರಿ ತಾಲೂಕಿನಲ್ಲಿ ಕಾಫಿ ಬೆಳೆ ನಷ್ಟವಾಗಿಲ್ಲ ಎಂದು ವರದಿ ನೀಡಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಇದಕ್ಕೆ ಧ್ವನಿಗೂಡಿಸಿದ ರೇವಣ್ಣ ಅವರು ಕಾಫಿ ಬೋರ್ಡ್ನಲ್ಲಿ ಐಎಎಸ್ ಅಧಿಕಾರಿಗಳು ಕಾರ್ಯದರ್ಶಿಯಾಗಿದ್ದು, ಇವರು ಮೇಲುಸ್ತುವಾರಿ ನೋಡಿಕೊಳ್ಳಬೇಕು. ಆದರೆ ಮುಖ್ಯಮಂತ್ರಿ ಅವರು ಆಗಮಿಸಿರುವ ಸಭೆಗೆ ಬಂದಿಲ್ಲ. ಅರ್ಜಿಗಳು ಬಂದಿಲ್ಲ ಎಂದರೆ ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಡಮಕಲ್ಲು-ಸುಬ್ರಹ್ಮಣ್ಯ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುತ್ತಿಲ್ಲ. ನಮ್ಮ ವಿರುದ್ದ (ಶಾಸಕರ) ಸುಪ್ರಿಂಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾವು ಜೈಲಿಗೆ ಹೋಗಲು ಸಿದ್ಧ ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು. ಕಡಮಕಲ್ಲು ಸುಬ್ರಹ್ಮಣ್ಯ ರಸ್ತೆ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆಗೆ ಪ್ರತ್ಯೇಕವಾಗಿ ಪುಷ್ಪಗಿರಿ ಪಕ್ಕದ ಹಮ್ಮಿಯಾಲದಲ್ಲಿ 47 ಎಕರೆ ಭೂಮಿಯನ್ನು ನೀಡಿದ್ದೇವೆ. ಆದರೂ ಸಹ ರಸ್ತೆ ನಿರ್ಮಾಣ ಮಾಡದೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಕೆ.ಜಿ.ಬೋಪಯ್ಯ ಅವರು ಕಿಡಿಕಾರಿದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಬೋಜೇಗೌಡ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಹಲವು ವಿಚಾರಗಳ ಕುರಿತು ಮಾತನಾಡಿದರು. ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಇತರರು ಇದ್ದರು.
ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಳೆ ಹಾನಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ 108 ಲಕ್ಷ ರೂ., ಟೌನ್ ಪಂಚಾಯತ್ ವ್ಯಾಪ್ತಿಯಲ್ಲಿ 75 ಲಕ್ಷ ರೂ. ಜಿಲ್ಲಾ ಪಂ. ವ್ಯಾಪ್ತಿಯಲ್ಲಿ 4,822 ಲಕ್ಷ ರೂ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ 1263 ಲಕ್ಷ ರೂ., ಸಣ್ಣ ನೀರಾವರಿ 1190 ಲಕ್ಷ ರೂ., ಸೆಸ್ಕ್ ವ್ಯಾಪ್ತಿಯಲ್ಲಿ 131 ಲಕ್ಷ ರೂ., ಪಿಎಂಜಿ ಎಸ್ವೈ ವ್ಯಾಪ್ತಿಯಲ್ಲಿ 7 ಲಕ್ಷ ರೂ., ರಾಷ್ಟ್ರೀಯ ಹೆದ್ದಾರಿ ವಿಭಾಗದಲ್ಲಿ 113 ಲಕ್ಷ ರೂ., ಒಟ್ಟಾರೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸುಮಾರು 326 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅವರು ಮಾಹಿತಿ ನೀಡಿದರು.







