ಲೋಕಸಭೆ ಚುನಾವಣೆಯಲ್ಲೂ ಮೈತ್ರಿ: ಐವನ್ ಡಿಸೋಜ

ಮಂಗಳೂರು, ಜು.21: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯ ಮೂಲಕವೇ ಚುನಾವಣೆಯನ್ನು ಎದುರಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.
ನಗರದ ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಸಿದ್ಧತೆ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿವೆ. ರಾಜ್ಯಾದ್ಯಂತ ಕಾರ್ಯಕರ್ತರೊಂದಿಗೆ ಚುನಾವಣೆ ಕುರಿತು ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯನ್ನು ಸರಕಾರ ಗಂಭೀರವಾಗಿ ಸ್ವೀಕರಿಸಿದ್ದು, ರಾಜ್ಯದ ಒಟ್ಟು 28 ಸ್ಥಾನಗಳಲ್ಲಿ 20 ಸ್ಥಾನಗಳನ್ನು ಗೆಲ್ಲುವ ಟಾರ್ಗೆಟ್ ಹಾಕಿಕೊಳ್ಳಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಚುನಾವಣೆ ಸಿದ್ಧತೆ ನಡೆಯಲಿವೆ ಎಂದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ಪಾಸ್ ನೀಡುವ ಕುರಿತು ವಿಧಾನ ಪರಿಷತ್ನಲ್ಲಿ ಪ್ರಸ್ತಾಪ ಮಾಡಲಾಗಿದೆ. ಅನುದಾನದ ಕೊರತೆಯಿಂದ ಯೋಜನೆ ಜಾರಿಗೊಳಿಸಲು ವಿಳಂಬವಾಗಿದೆ. ಮುಂದಿನ ದಿಗಳಲ್ಲಿ ಹಂತಹಂತವಾಗಿ ಚಿತ ಬಸ್ಪಾಸ್ ವಿತರಿಸಲು ಸರಕಾರ ಮುಂದಾಗಲಿದೆ ಎಂದು ತಿಳಿಸಿದರು.
ಕ್ರೈಸ್ತ ಅಭಿವೃದ್ಧಿ ಪರಿಷತ್ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ಇದನ್ನು ಕೂಡಲೇ ಜಾರಿಗೆ ತರಲು ಮುಂದಾಗಬೇಕು ಎಂದು ಆಗ್ರಹಿಸಿದರು.
2018-19ರಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ 200 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಿಗಮದ ಅನುದಾನವನವನ್ನು 300 ಕೋಟಿ ರೂ.ಗೆ ಏರಿಸಬೇಕು ಎಂದು ಅವರು ಆಗ್ರಹಿಸಿದರು.
ದ.ಕ. ಜಿಲ್ಲೆಯಲ್ಲಿ ನಾಲ್ಕು ವರ್ಷಗಳಲ್ಲಿ 5,980 ವಿದ್ಯಾರ್ಥಿಗಳಿಗೆ 20.46 ಕೋಟಿ ರೂ.ನ್ನು ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ನೀಡಲಾಗಿದೆ. ಸರಕಾರ ಎರಡು ಕೋಟಿ ಉದ್ಯೋಗ ನಿರ್ಮಿಸುವ ಭರವಸೆ ನೀಡಿತ್ತು. ಆದರೆ ಸಾಧ್ಯವಾಗಲಿಲ್ಲ. ವಿದ್ಯಾರ್ಥಿಗಳಿಗೆ ನೀಡಿರುವ ಸಾಲವನ್ನು ಕೂಡಲೇ ಮನ್ನಾ ಮಾಡಬೇಕು ಎಂದು ಐವನ್ ಡಿಸೋಜ ಒತ್ತಾಯಿಸಿದರು.
ಮನೆ-ಮಳಿಗೆ ಯೋಜನೆಯಡಿ 850 ಅರ್ಜಿ ಸಲ್ಲಿಕೆ
ಕೋಮು ಗಲಭೆ/ಕೋಮು ಹಿಂಸಾಚಾರ ಪ್ರಕರಣಗಳಲ್ಲಿ ನಿರಪರಾಧಿಗಳಾಗಿ ಖುಲಾಸೆಗೊಂಡ ಅಲ್ಪಸಂಖ್ಯಾತರಿಗೆ ಪುನರ್ವಸತಿ ಕಲ್ಪಿಸಲು ‘ಮನೆ-ಮಳಿಗೆ ಯೋಜನೆ’ ಎಂಬ ನೂತನ ಯೋಜನೆಯನ್ನು ಸರಕಾರ ಜಾರಿಗೆ ತಂದಿದೆ ಎಂದರು.
ಈ ಯೋಜನೆಯಲ್ಲಿ ಪರಿಸರ ವಿಕೋಪದಿಂದ ಮನೆ, ವ್ಯಾಪಾರ ಸ್ಥಳ ಕಳೆದುಕೊಂಡವರು, ಸನ್ನಡತೆ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯಾದವರು, ಗೂಂಡಾಕಾಯ್ದೆ ಇನ್ನಿತರ ಮತ್ತಿತರ ಪ್ರಕರಣಗಳಲ್ಲಿ ನಿರಪರಾಧಿಗಳಾಗಿ ಬಿಡುಗಡೆಗೊಂಡವರು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಆನ್ಲೈನ್ ಮೂಲಕ 850 ಅರ್ಜಿಗಳನ್ನು ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ. ಅಲ್ಪಸಂಖ್ಯಾತರ ರಕ್ಷಣೆಗೆ ಸರಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದರು.