ಸಮಗ್ರ ಕರ್ನಾಟಕದ ಅಭಿವೃದ್ಧಿ ನಮ್ಮ ಗುರಿ: ದಿನೇಶ್ ಗುಂಡೂರಾವ್
ಬೆಂಗಳೂರು, ಜು.26: ಸಮಗ್ರ ಕರ್ನಾಟಕದ ಅಭಿವೃದ್ಧಿ ಮಾಡುವುದು ನಮ್ಮ ಗುರಿಯಾಗಿದ್ದು, ಸಮ್ಮಿಶ್ರ ಸರಕಾರದ ಮೊದಲ ಬಜೆಟ್ ಬಗ್ಗೆ ಕೆಲವರು ತಪ್ಪಾಗಿ ಅರ್ಥೈಸಿಕೊಂಡು ಸುಳ್ಳು ಮಾಹಿತಿಗಳನ್ನು ಹರಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು.
ಗುರುವಾರ ನಗರದ ಕ್ವೀನ್ಸ್ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ನಲ್ಲಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಯಾವುದೇ ಭಾಗಕ್ಕೆ ಅನ್ಯಾಯವಾಗಿಲ್ಲ. ಜೆಡಿಎಸ್ ಶಾಸಕರು ಹಾಸನ, ಮಂಡ್ಯ, ರಾಮನಗರ, ತುಮಕೂರು ಕ್ಷೇತ್ರಗಳಿಂದ ಗೆದ್ದು ಬಂದಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕರು ರಾಜ್ಯದ ಎಲ್ಲ ಭಾಗಗಳಿಂದಲೂ ಆಯ್ಕೆಯಾಗಿದ್ದಾರೆ ಎಂದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಲಾಗುವುದು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯದ ಎಲ್ಲ ಜನರನ್ನೂ ಪ್ರತಿನಿಧಿಸುತ್ತಾರೆ. ಮತ ಹಾಕುವುದಕ್ಕೂ ಅಭಿವೃದ್ಧಿಗೂ ಯಾವುದೇ ಸಂಬಂಧವಿಲ್ಲ. ಕರಾವಳಿ ಭಾಗದಲ್ಲಿ ನಮ್ಮ ಶಾಸಕರು ಇಲ್ಲ. ಹಾಗಂತ, ನಾವು ಆ ಭಾಗವನ್ನು ನಿರ್ಲಕ್ಷಿಸಲು ಸಾಧ್ಯವೇ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕ ಕುರಿತು ಮುಖ್ಯಮಂತ್ರಿ ಯಾವ ಸಂದರ್ಭದಲ್ಲಿ ಯಾವ ಮಾತುಗಳನ್ನಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಆದರೆ, ಸಮಗ್ರ ಕರ್ನಾಟಕದ ಅಭಿವೃದ್ಧಿಯೇ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರಕಾರದ ಗುರಿ. ರಾಜಕೀಯವಾದ ಮಾತುಗಳಿಗೂ, ಆಡಳಿತಾತ್ಮಕ ವಿಚಾರಕ್ಕೂ ಸಂಬಂಧವಿರುವುದಿಲ್ಲ ಎಂದು ಅವರು ತಿಳಿಸಿದರು.
ಭಿನ್ನಾಭಿಪ್ರಾಯವಿಲ್ಲ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ನನ್ನ ನಡುವೆ ಯಾವುದೆ ಭಿನ್ನಾಭಿಪ್ರಾಯ, ಸಮಸ್ಯೆಗಳಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದು, ಪಕ್ಷ ಸಂಘಟನೆಗಾಗಿ ಶ್ರಮಿಸುತ್ತಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ನಮ್ಮ ಮುಂದಿರುವ ಮಹತ್ವದ ಗುರಿ ಎಂದು ದಿನೇಶ್ಗುಂಡೂರಾವ್ ಹೇಳಿದರು.