ಕರಗಡ ಯೋಜನೆಗೆ ಚಾಲನೆ ನೀಡಿದ್ದು ನಾನೇ, ಉದ್ಘಾಟಿಸುವುದೂ ನಾನೇ : ಸಿಎಂ ಭರವಸೆ

ಚಿಕ್ಕಮಗಳೂರು, ಆ.26: ಜಿಲ್ಲೆಯ ಬಯಲುಸೀಮೆಗೆ ನೀರುಣಿಸುವ ಕರಗಡ ಏತ ನೀರಾವರಿ ಯೋಜನೆ ಕಾಮಗಾರಿಗೆ 2007ರಲ್ಲಿ ತಾನೇ ಚಾಲನೆ ನೀಡಿದ್ದು, ಈ ಯೋಜನೆ ಇನ್ನೂ ಪೂರ್ಣಗೊಳ್ಳದಿರುವುದು ವಿಪರ್ಯಾಸ. ಸದ್ಯ ತನ್ನ ಅವಧಿಯಲ್ಲಿಯೇ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು, ತಾನೇ ಅದನ್ನು ಉದ್ಘಾಟಿಸುತ್ತೇನೆ. ಈ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ಸೋದರರಾದ ಎಸ್.ಎಲ್.ಧರ್ಮೇಗೌಡ ಮತ್ತು ಎಸ್.ಎಲ್.ಭೋಜೇಗೌಡ ನೇತೃತ್ವದಲ್ಲಿ ಜಿಲ್ಲೆಯ ರೈತ ಮುಖಂಡರು, ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಮುಖಂಡರ ನಿಯೋಗದೊಂದಿಗೆ ವಿಧಾನಸೌಧದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಕರಗಡ ಏತ ನೀರಾವರಿ ಯೋಜನೆ ಕಾಮಗಾರಿಗೆ 17.5 ಕೋಟಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಬಯಲುಸೀಮೆಯ ರೈತರಿಗೆ ನೀರನ್ನು ಒದಗಿಸುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ 200 ಎಚ್.ಪಿ ಮೋಟಾರ್ ಹಾಗೂ ಪ್ರತ್ಯೇಕ ಟ್ರಾನ್ಸ್ಫಾರ್ಮರ್ ಅಳವಡಿಸಿ ನೀರನ್ನು ಲಿಫ್ಟ್ ಮಾಡಬೇಕು. ಇದರಿಂದ ಜಿಲ್ಲೆಯ 14 ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಸಾಧ್ಯ ಎಂದು ತಿಳಿಸಿದರು.
2007ರಲ್ಲಿ ಆರಂಭಗೊಂಡ ಯೋಜನೆ ಕಾಮಗಾರಿ 11 ವರ್ಷಗಳಷ್ಟು ಸುಧೀರ್ಘ ಕಾಲ ವಿಳಂಬವಾದ ಬಗ್ಗೆ ಹಾಗೂ ಮೊದಲನೇ ಹಂತದ ಕಾಮಗಾರಿಯಲ್ಲಿ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಕುಮಾರಸ್ವಾಮಿ ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಇದೇ ವೇಳೆ ಯೋಜನೆ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ, ಸದಾ ಬರಗಾಲದ ದವಡೆಗೆ ಸಿಲುಕಿ ನಲುಗುತ್ತಿರುವ ಬಯಲುಸೀಮೆಯ ರೈತರಿಗೆ ನೀರೊದಗಿಸುವಂತೆ ವಿಧಾನಪರಿಷತ್ ಸದಸ್ಯರಾದ ಎಸ್.ಎಲ್.ಧರ್ಮೇಗೌಡ ಮತ್ತು ಭೋಜೇಗೌಡ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸದ್ಯದಲ್ಲೇ ಯೋಜನೆ ಕಾಮಗಾರಿ ಪ್ರದೇಶಕ್ಕೆ ತಾವೇ ಖುದ್ದು ಭೇಟಿ ನೀಡಿ ಪ್ರಗತಿಯನ್ನು ಪರಿಶೀಲಿಸುತ್ತೇನೆ. ಜೊತೆಗೆ ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಬಯಲುಸೀಮೆಯ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು.
ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯಸ್ವಾಮಿ, ಜಿಲ್ಲಾ ರೈತ ಸಂಘದ ಮುಖಂಡ ಆರ್.ಆರ್.ಮಹೇಶ್, ಗುರುಶಾಂತಪ್ಪ, ಸಿಪಿಐ ಮುಖಂಡ ಬಿ.ಅಮ್ಜದ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.







