ಯಲಹಂಕ: ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ಬೆಂಗಳೂರು, ಸೆ.24: ನಗರದ ಯಲಹಂಕ ಉಪನಗರ ಬ್ಲಾಕ್ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಅರುಣ್ಕುಮಾರ್(27) ಎಂಬುವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಅಲ್ಲಾಳಸಂದ್ರ ನಿವಾಸಿಯಾಗಿರುವ ಅರುಣ್ಕುಮಾರ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ, ಇತ್ತೀಚೆಗೆ ಬ್ಲಾಕ್ನ ಯುವ ಘಟಕದ ಅಧ್ಯಕ್ಷನಾಗಿದ್ದ ಎನ್ನಲಾಗಿದೆ.
ರವಿವಾರ ತಡರಾತ್ರಿ 2:30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ವೇಳೆ ಅರುಣ್ಕುಮಾರ್ನನ್ನು ಅಲ್ಲಾಳಸಂದ್ರ ಗೇಟ್ ಬಳಿ ದುಷ್ಕರ್ಮಿಗಳ ತಂಡ, ಸಂಚು ರೂಪಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಯಲಹಂಕ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮೀಪದಲ್ಲಿ ಅಳವಡಿಸಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.