ತಳಮಟ್ಟದಿಂದ ಬಿಎಸ್ಪಿ ಬಲಗೊಳ್ಳಲಿದೆ: ಎನ್.ಮಹೇಶ್

ಬೆಂಗಳೂರು, ಅ. 23: ಬಹುಜನ ಸಮಾಜ ಪಕ್ಷವನ್ನು ತಳಮಟ್ಟದಿಂದ ಬಲಗೊಳಿಸಲು ಪ್ರತಿ ಜಿಲ್ಲೆ, ವಿಧಾನಸಭಾ ಕ್ಷೇತ್ರ ಮತ್ತು ವಲಯವಾರು ಸಮಿತಿಗಳನ್ನು ರಚನೆ ಮಾಡಲಾಗುವುದು ಎಂದು ಬಿಎಸ್ಪಿ ಶಾಸಕ ಎನ್.ಮಹೇಶ್ ತಿಳಿಸಿದ್ದಾರೆ.
ಮಂಗಳವಾರ ನಗರದ ದೇವರಾಜ ಅರಸು ಭವನ ಸಭಾಂಗಣದಲ್ಲಿ ಬಿಎಸ್ಪಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆ ಪಕ್ಷ ಸಂಘಟಿಸಲು ಮುಂದಾಗಿದ್ದೇವೆ. ಮುಂದಿನ ಎರಡು ತಿಂಗಳಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲಿ ಸಮಿತಿಗಳನ್ನು ರಚನೆ ಮಾಡಿ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲಾಗುವುದು ಎಂದರು.
2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಯಾವುದೇ ಇತರೆ ಪಕ್ಷಗಳ ನಡುವೆ ಮೈತ್ರಿ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ. ಆದ್ದರಿಂದ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸುತ್ತಿದ್ದು, ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದು ಮಹೇಶ್ ನುಡಿದರು.
ಪ್ರಸ್ತುತ ರಚನೆಯಾಗುತ್ತಿರುವ ಸಮಿತಿಗಳಿಂದ ವರದಿಯನ್ನು ತರಿಸಿಕೊಳ್ಳಲಾಗುವುದು. ವರದಿಯ ಆಧಾರದಲ್ಲಿ ಯಾವ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದನ್ನು ಪರಿಶೀಲಿಸಿ ಅಂತಿಮವಾಗಿ ರಾಷ್ಟ್ರ ನಾಯಕರೊಡನೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.







