ಪಕ್ಷದ ನಾಯಕರ ವಿವಾದಾತ್ಮಕ ಹೇಳಿಕೆಯೇ ಉಪಚುನಾವಣೆಯ ಹಿನ್ನಡೆಗೆ ಕಾರಣ: ಸದಾನಂದ ಗೌಡ

ಮಂಗಳೂರು, ನ.10: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ಪಕ್ಷದ ಕೆಲ ನಾಯಕರ ವಿವಾದಾತ್ಮಕ ಹೇಳಿಕೆಗಳೇ ಕಾರಣ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಒಪ್ಪಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಉಪಚುನಾವಣೆಯಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ. ಹಿಂದಿನ ಸಾರಿಯ ಲೋಕಸಭೆ ಚುನಾವಣೆಯಲ್ಲಿ ಕೈಗೊಂಡಂತಹ ಕ್ರಮಗಳನ್ನೇ ಈ ಬಾರಿಯೂ ಕೈಗೊಳ್ಳಲಾಗುವುದು. ಮುಂದಿನ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಲಿದ್ದು, 20ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗಳಿಸಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಇತಿಹಾಸ ಪುಟ ಸೇರಲಿದೆ: ಟಿಪ್ಪು ಜಯಂತಿ ಆಚರಣೆ ಮಾಡುವುದರ ಬದಲು ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು. ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.
ಘಟಬಂಧನ್ ಸಾಧ್ಯ: ಮಹಾ ಘಟಬಂಧನ್ ಯಶಸ್ವಿ ಆಗಲು ಸಾಧ್ಯವಿಲ್ಲ. ಇದಕ್ಕೆ ಸಮರ್ಥ ನಾಯಕತ್ವದ ಕೊರತೆ ಇದೆ. ರಾಹುಲ್ ಗಾಂಧಿ ಒಬ್ಬ ಜೋಕರ್. ಅವರ ನಾಯಕತ್ವಕ್ಕೆ ಕಾಂಗ್ರೆಸ್ ಪಕ್ಷದಲ್ಲಿಯೇ ವಿರೋಧ ಇದೆ. ಮಹಾ ಘಟಬಂಧನ್ನಲ್ಲಿರುವ ಪ್ರಾದೇಶಿಕ ಪಕ್ಷಗಳು ಏಡಿ ಇದ್ದ ಹಾಗಿವೆ. ಒಬ್ಬರು ಇನ್ನೊಬ್ಬರನ್ನು ಮೇಲಕ್ಕೆ ಹೋಗಲು ಬಿಡುವುದಿಲ್ಲ ಎಂದರು.







