ದಡ್ಡಲಕಾಡು ಸರಕಾರಿ ಶಾಲೆಯ ಕಾಮಗಾರಿ ಪ್ರಗತಿ ಪರಿಶೀಲನೆ

ಬಂಟ್ವಾಳ, ನ. 10: ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ನ ದತ್ತು ಯೋಜನೆಯಡಿ ನಿರ್ಮಾಣಗೊಂಡಿರುವ ದಡ್ಡಲಕಾಡುವಿನ ದ.ಕ.ಜಿ.ಪಂ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡದ ಲೋಕಾರ್ಪಣೆ ಸಮಾರಂಭ ಡಿ. 22 ಮತ್ತು 23ರಂದು ನಡೆಯಲಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಶನಿವಾರ ಸಂಜೆ ದಡ್ಡಲಕಾಡು ಸರಕಾರಿ ಶಾಲೆಯ ಮೇಲಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲು ಪೂರ್ವಭಾವಿಯಾಗಿ ಸುದ್ದಿಗೋಷ್ಟಿ ನಡೆಸಿ ಈ ಮಾಹಿತಿ ನೀಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯ ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವ್ಡೇಕಾರ್ ಅವರನ್ನು ಕರೆಸಿಕೊಳ್ಳಲು ಪ್ರಯತ್ನ ನಡೆಸುತ್ತಿರುವುದಾಗಿ ಅವರು ತಿಳಿಸಿದರು.
ಊರಿನ ಯುವಕರ ತಂಡ ಸೇರಿಕೊಂಡು ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕೆಂಬ ಪಣ ತೊಟ್ಟರೆ ಸರಕಾರಿ ಶಾಲೆಯನ್ನು ಉಳಿಸಲು ಸಾಧ್ಯವಿದೆ ಎನ್ನುವುದನ್ನು ದಡ್ಡಲಕಾಡು ಶಾಲೆಯನ್ನು ದೇಶದಲ್ಲಿಯೇ ಮಾದರಿ ಶಾಲೆಯನ್ನಾಗಿ ರೂಪಿಸಿ ಕ್ಲಬ್ನ ಅಧ್ಯಕ್ಷ ಪ್ರಕಾಶ್ ಅಂಚನ್ಅವರ ನೇತೃತ್ವದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಸಾಧಿಸಿ ತೋರಿಸಿದೆ. ಇದು ಅಭಿನಂದನೀಯ ಕಾರ್ಯ, ಸರಕಾರ ಅಥವಾ ಜನಪ್ರತಿನಿಧಿಗಳಿಂದ ಅನುದಾನ ಪಡೆಯದೆ ದಾನಿಗಳ ನೆರವಿನಿಂದ ಮಾದರಿಯಾಗಿ ಶಾಲೆ ಕಟ್ಟಡ ನಿರ್ಮಿಸಿದ್ದಾರೆ. 10 ಹೆಚ್ಚುವರಿ ಶಿಕ್ಷಕರನ್ನು ಖಾಸಗಿಯಾಗಿ ನೇಮಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಇಲ್ಲಿ ಕಲ್ಪಿಸಿಕೊಂಡಿದ್ದಾರೆ. ಈ ಕಾರಣದಿಂದಾಗಿಯೇ ಈ ಪರಿಸರದಲ್ಲಿ ಸಾಕಷ್ಟು ಖಾಸಗಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳು ಇದ್ದರೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ, ನನ್ನ ಲೋಕ ಸಭಾ ಕ್ಷೇತ್ರದಲ್ಲಿ ಇಂತಹ ಶಿಕ್ಷಣ ಸಂಸ್ಥೆಯಿರುವುದು ನನಗೆ ಹೆಮ್ಮೆ ಎಂದು ತಿಳಿಸಿದರು.
ಮಾತೃ ಭಾಷೆಯಲ್ಲಿ ಶಿಕ್ಷಣ ಕೊಡಿಸಬೇಕೆನ್ನುವುದು ಪ್ರಸ್ತುತ ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಇಂಗ್ಲಿಷ್ ವ್ಯಾಮೋಹ ಇರುವಂತಹ ಈ ದಿನದಲ್ಲಿ ಗ್ರಾಮೀಣ ಭಾಗದಲ್ಲೂ ಮಾತೃ ಭಾಷೆಯ ಶಿಕ್ಷಣಕ್ಕೆ ಆದ್ಯತೆ ಕಡಿಮೆಯಾಗುತ್ತಿದೆ. ವಿಶೇಷವಾಗಿ ದ.ಕ. ಜಿಲ್ಲೆಯಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮಕ್ಕಳ ಕೊರತೆಯನ್ನು ಕಾಣುತ್ತಿದ್ದೇವೆ. ಹೆಚ್ಚಿನ ಸರಕಾರಿ ಶಾಲೆಗಳಲ್ಲಿ 3-4 ವಿದ್ಯಾರ್ಥಿಗಳನ್ನು ಇದ್ದಾರೆ. ಸುಮಾರು 14 ರಷ್ಟು ಸರಕಾರಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೀಗ ಹಾಕುವ ಪರಿಸ್ಥಿತಿಯಲ್ಲಿರುವ ಸತ್ಯವನ್ನು ಪ್ರಗತಿ ಪರಿಶೀಲನಾ ಸಭೆಯ ಮೂಲಕ ಕಂಡುಕೊಂಡಿದ್ದೇನೆ ಎಂದರು.
ನಮ್ಮ ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ ವ್ಯಾಪಕವಾಗಿ ನಿರ್ಮಾಣಗೊಂಡಿರುವ ಶಿಕ್ಷಣ ಸಂಸ್ಥೆಗಳು, ಹಿಂದೆ ಗ್ರಾಮಕ್ಕೊಂದರಂತಿದ್ದ ಸರಕಾರಿ ಶಾಲೆಗಳು ಈಗ ಮತಗಟ್ಟೆಗೊಂದರಂತಿದೆ. ನಗರಕ್ಕೆ ವಲಸೆ ಹೋಗುತ್ತಿರುವ ಪರಿಸ್ಥಿತಿ ಹಾಗೂ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳನ್ನು ಆಕರ್ಷಿಸಿ ತ್ತಿರುವ ಕೆಲಸ ಮಾಡುತ್ತಿರುವುದು, ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕಲಿತರೆ ನಮ್ಮ ಮಕ್ಕಳು ವಿದ್ಯಾವಂತರು, ಬುದ್ಧಿವಂತರಾಗುತ್ತಾರೆ ಎನ್ನುವ ಜನರ ಮಾನಸಿಕತೆ ಇದು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಲು ಕಾರಣವಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರಾ, ಹರಿಕೃಷ್ಣ ಬಂಟ್ವಾಳ್, ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಪಂಜಿಕಲ್ಲು ಗ್ರಾಪಂ ಅಧ್ಯಕ್ಷೆ ಸುಮಿತ್ರ ಯೋಗೀಶ್ ಕುಲಾಲ್, ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಗೌಡ, ಸದಸ್ಯರಾದ ಪೂವಪ್ಪ ಮೆಂಡನ್, ಸಂಜೀವ ಪೂಜಾರಿ ಪಿಲಿಂಗಾಲು, ರೂಪ ಲೋಕನಾಥ, ಜಿ.ಆನಂದ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಹಾಜರಿದ್ದರು. ಪುರುಷೋತ್ತಮ ಅಂಚನ್ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿಗೋಷ್ಟಿಯ ಬಳಿಕ ಶಾಲೆಯ ಮೇಲಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಬೆಳೆಸಿದ ತರಕಾರಿ ಬೆಳೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.







