ಮೈಸೂರು ಮನಪಾ ಮೇಯರ್ ಆಯ್ಕೆ ವಿಚಾರ ವರಿಷ್ಠರಿಗೆ ಬಿಟ್ಟದ್ದು: ಸಚಿವ ಜಿ.ಟಿ.ದೇವೇಗೌಡ
ಮೈಸೂರು,ನ.11: ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ವರಿಷ್ಠರಿಗೆ ಬಿಟ್ಟಿದ್ದು. ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೊ ಅದಕ್ಕೆ ನಾವು ಬದ್ದರಾಗಿರುವುದಾಗಿ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರವಿವಾರ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು, ನ.17 ರಂದು ಮೇಯರ್ ಆಯ್ಕೆಗೆ ನಿಗದಿಯಾಗಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮಗೆ ಮೇಯರ್ ಸ್ಥಾನ ಬೇಕು ಎಂದು ಕೇಳಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರು ಕುಳಿತು ತೀರ್ಮಾನ ಮಾಡಲಿದ್ದಾರೆ. ಈ ಸಂಬಂಧ ಇಂದು ಅಥವಾ ನಾಳೆ ಸಭೆ ಸೇರಿ ಪಕ್ಷದ ಮುಖಂಡರೊಂದಿಗೆ ಚರ್ಚಿಸುವುದಾಗಿ ಹೇಳಿದರು.
ನಮ್ಮ ಪಕ್ಷದ ನಾಯಕರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾವೆಲ್ಲರೂ ಬದ್ದರಾಗಿದ್ದು, ಅವರ ನಿರ್ಧಾರವೇ ಅಂತಿಮವಾಗಲಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ. ವೈದ್ಯರ ಸಲಹೆಯಂತೆ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದರು.