ಮದ್ರಸಾಗಳಲ್ಲಿ ಶಾಲಾ ಶಿಕ್ಷಣ ಅನುಷ್ಟಾನ ಸಮರ್ಪಕವಾಗಬೇಕು: ಶಿವಮೊಗ್ಗ ಡಿಸಿ ದಯಾನಂದ

ಶಿವಮೊಗ್ಗ, ನ. 13: ಮದ್ರಸಾಗಳಲ್ಲಿ ಔಪಚಾರಿಕ ಶಾಲಾ ಶಿಕ್ಷಣ ಒದಗಿಸುವ ಯೋಜನೆ ಸಮರ್ಪಕವಾಗಿ ಅನುಷ್ಟಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ಮದ್ರಸಾಗಳ ವಿದ್ಯಾರ್ಥಿಗಳನ್ನು ಮುಖ್ಯ ವಾಹಿನಿಗೆ ಕರೆ ತರುವ ಉದ್ದೇಶದಿಂದ ಆಯ್ದ ಮದ್ರಸಾಗಳಲ್ಲಿ ಶಾಲಾ ಶಿಕ್ಷಣವನ್ನು ಸಹ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪ್ರಸ್ತುತ ಜಿಲ್ಲೆಯ 7 ಮದ್ರಸಾಗಳು ಈ ಯೋಜನೆಯ ಅಡಿ ಅನುದಾನ ಪಡೆದುಕೊಂಡಿವೆ ಎಂದು ಹೇಳಿದರು.
ಆ ಮದ್ರಸಾಗಳಲ್ಲಿ ಶಾಲಾ ಶಿಕ್ಷಣವನ್ನು ಕಲಿಸಲಾಗುತ್ತಿದೆಯೇ? ಶಾಲಾ ಶಿಕ್ಷಣ ಪಡೆಯಲು ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂಬ ಕುರಿತು ಪರಿಶೀಲನೆ ನಡೆಸಬೇಕು. ಎಲ್ಲಾ ಮದ್ರಾಸಗಳಲ್ಲಿ ಈ ಯೋಜನೆ ಜಾರಿಗೊಳಿಸುವ ಕುರಿತು ಅರಿವು ಮೂಡಿಸುವ ಕಾರ್ಯವನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮದ್ರಸಾಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಗರಿಷ್ಟ 10ಲಕ್ಷ ರೂ. ಅನುದಾನ ಬಿಡುಗಡೆಗೆ ಅವಕಾಶವಿದ್ದು, ಜಿಲ್ಲೆಯಲ್ಲಿ ಒಟ್ಟು 7 ಮದ್ರಸಾಗಳಿಗೆ 47ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಧರ್ಮಪ್ಪ ಅವರು ಸಭೆಗೆ ಮಾಹಿತಿ ನೀಡಿದರು.
ಶಿಕಾರಿಪುರ ತಾಲೂಕಿನಲ್ಲಿ ಎರಡು ವರ್ಷಗಳ ಹಿಂದೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನುಮೋದನೆ ದೊರಕಿದ್ದು, ಇನ್ನೂ ಸ್ವಂತ ಕಟ್ಟಡ ಕಟ್ಟಲು ಕ್ರಮ ಕೈಗೊಂಡಿರುವುದಿಲ್ಲ. ವಸತಿ ಶಾಲೆಗಾಗಿ ಜಮೀನು ಪಡೆದುಕೊಳ್ಳಲು ಕ್ರಮಕೈಗೊಳ್ಳುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸೂಚಿಸಿದರು.
ಗಂಗಾ ಕಲ್ಯಾಣ ಯೋಜನೆಯಡಿ ಕೇವಲ ಶೇ.61ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಕಳೆದ ವರ್ಷದ ಕಾರ್ಯಕ್ರಮಗಳ ಇನ್ನೂ ಟೆಂಡರ್ ಪ್ರಕ್ರಿಯೆ ನಡೆಸಿರುವುದಿಲ್ಲ. ತಕ್ಷಣ ಟೆಂಡರ್ ಕರೆದು ಕಾಮಗಾರಿಗಳನ್ನು ಅನುಷ್ಟಾನಗೊಳಿಸಬೇಕು. ಸ್ಕಾಲರ್ ಶಿಪ್ ಯೋಜನೆಯಡಿ 2017-18ನೇ ಸಾಲಿನಲ್ಲಿ 20385 ಪ್ರಿ ಮೆಟ್ರಿಕ್, 6212 ಪೋಸ್ಟ್ ಮೆಟ್ರಿಕ್ ಹಾಗೂ 807 ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಸ್ವೀಕರಿಸಲಾಗಿದೆ. 2018-19ನೇ ಸಾಲಿನಲ್ಲಿ ಒಟ್ಟು 34393 ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಧರ್ಮಪ್ಪ ಅವರು ಮಾಹಿತಿ ನೀಡಿದರು.







