ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ: ರಾಜ್ಯಸಭಾ ಸದಸ್ಯ ಡಾ.ನಸೀರ್ ಹುಸೇನ್
![ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ: ರಾಜ್ಯಸಭಾ ಸದಸ್ಯ ಡಾ.ನಸೀರ್ ಹುಸೇನ್ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ: ರಾಜ್ಯಸಭಾ ಸದಸ್ಯ ಡಾ.ನಸೀರ್ ಹುಸೇನ್](https://www.varthabharati.in/sites/default/files/images/articles/2018/11/24/164786.jpg)
ಬೆಂಗಳೂರು, ನ.24: ಮುಂಬರುವ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದು ಬಿಂಬಿಸಲ್ಪಟ್ಟಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಝೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಮೇಲುಗೈ ಸಾಧಿಸಲಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಸೈಯ್ಯದ್ ನಸೀರ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಇಲ್ಲಿನ ಆರ್.ಟಿ.ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇದ್ದು, ಕಾಂಗ್ರೆಸ್ ಪಕ್ಷಕ್ಕೆ ಪೂರಕವಾದ ವಾತಾವರಣವಿದೆ. ಅದೇ ರೀತಿ ತೆಲಂಗಾಣದಲ್ಲಿಯೂ ಕಾಂಗ್ರೆಸ್ ಹಾಗೂ ಟಿಡಿಪಿ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದರು.
ಮಿಝೋರಾಂನಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಸ್ಥಳೀಯ ಪ್ರಾದೇಶಿಕ ಪಕ್ಷವೊಂದರ ನಡುವೆ ತ್ರಿಕೋನ ಪೈಪೋಟಿಯಿದೆ. ಅಗತ್ಯವಿದ್ದಲ್ಲಿ, ಪ್ರಾದೇಶಿಕ ಪಕ್ಷದ ಜೊತೆ ಕೈ ಜೋಡಿಸಿ ನಾವು ಸರಕಾರ ರಚನೆಗೆ ಮುಕ್ತ ಅವಕಾಶವನ್ನು ಹೊಂದಿದ್ದೇವೆ ಎಂದು ಅವರು ಹೇಳಿದರು.
ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ರಾವ್(ಕೆಸಿಆರ್) ಅವಧಿಗೆ ಮುನ್ನ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿದ್ದಾರೆ. ಅವರ ಕುಟುಂಬ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದೆ. ಯಾವ ಉದ್ದೇಶಕ್ಕಾಗಿ ಪ್ರತ್ಯೇಕ ತೆಲಂಗಾಣ ರಚನೆಯಾಯಿತೋ, ಆ ಉದ್ದೇಶವನ್ನು ಅಧಿಕಾರಕ್ಕೆ ಬಂದ ನಂತರ ಕೆಸಿಆರ್ ಮರೆತಿದ್ದಾರೆ ಎಂದು ಅವರು ದೂರಿದರು.
30-40 ವರ್ಷಗಳ ಸುದೀರ್ಘ ಹೋರಾಟಕ್ಕೆ ಮನ್ನಣೆ ನೀಡಿ ಯುಪಿಎ ಸರಕಾರದ ಅವಧಿಯಲ್ಲಿ ಪ್ರತ್ಯೇಕ ತೆಲಂಗಾಣ ರಚನೆ ಮಾಡಲಾಗಿತ್ತು. ಜನಸಾಮಾನ್ಯರು ಟಿಆರ್ಎಸ್ ಪಕ್ಷದ ಆಡಳಿತದಿಂದ ಭ್ರಮನಿರಸನಗೊಂಡಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಟಿಡಿಪಿ ಮೈತ್ರಿಕೂಟಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ನಸೀರ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.
ಮರ್ಯಾದಾ ಹತ್ಯೆ ಪ್ರಕರಣಗಳನ್ನು ಉತ್ತರ ಭಾರತದಲ್ಲಿ ಮಾತ್ರ ನೋಡಲಾಗುತ್ತಿತ್ತು. ಆದರೆ, ತೆಲಂಗಾಣದಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಮಹಿಳೆಯರು, ಅಲ್ಪಸಂಖ್ಯಾತರು ಹಾಗೂ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿವೆ. ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿಯೂ ಕೆಸಿಆರ್ ಸರಕಾರ ವಿಫಲವಾಗಿದೆ ಎಂದು ಅವರು ದೂರಿದರು.
ಅಲ್ಪಸಂಖ್ಯಾತರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ.12ರಷ್ಟು ಮೀಸಲಾತಿ ನೀಡುವುದಾಗಿ ಕಳೆದ ಚುನಾವಣೆಯಲ್ಲಿ ಕೆಸಿಆರ್ ಘೋಷಣೆ ಮಾಡಿದ್ದರು. ನ್ಯಾಯಾಲಯವು ಕರ್ನಾಟಕದ ಮಾದರಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ಸಂಬಂಧ ಸಮೀಕ್ಷೆ ನಡೆಸಿ ಮೀಸಲಾತಿ ಪ್ರಮಾಣ ನಿಗದಿ ಪಡಿಸುವಂತೆ ಸೂಚನೆ ನೀಡಿತ್ತು. ಆದರೆ, ಈ ಸಂಬಂಧ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಸೀರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದರು.
ಎನ್ಡಿಎ ಹಾಗೂ ಪ್ರಧಾನಿ ನರೇಂದ್ರಮೋದಿ ಪರವಾಗಿ ಕೆಸಿಆರ್ ಒಲವು ಹೊಂದಿದ್ದಾರೆ. ನೋಟುಗಳ ಅಮಾನ್ಯೀಕರಣ, ರಾಜ್ಯಸಭೆಯ ಉಪ ಸಭಾಪತಿ ಚುನಾವಣೆ, ಕೇಂದ್ರ ಸರಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ಸಂದರ್ಭದಲ್ಲಿ ಎನ್ಡಿಎ ಪರವಾಗಿದ್ದ ಕೆಸಿಆರ್, ಭವಿಷ್ಯದಲ್ಲಿಯೂ ಅವರ ಪರವಾಗಿಯೇ ಇರುತ್ತಾರೆ ಎಂದು ಅವರು ಕಿಡಿಗಾರಿದರು.
ಎನ್ಡಿಎ ಮೈತ್ರಿಕೂಟದಿಂದ ಹೊರ ಬಂದು, ಕಾಂಗ್ರೆಸ್ ಜೊತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೈ ಜೋಡಿಸುತ್ತಿದ್ದಂತೆ, ಅಲ್ಪಸಂಖ್ಯಾತ ಸಮುದಾಯದ ಒಬ್ಬರಿಗೆ ಸಚಿವ ಸಂಪುಟದಲ್ಲಿ ಸ್ಥಾನ, ಒಬ್ಬರನ್ನು ಸರಕಾರದ ಮುಖ್ಯ ಸಚೇತಕ ಹಾಗೂ ನಿಗಮ, ಮಂಡಳಿಯೊಂದಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ನಸೀರ್ ಹುಸೇನ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಉಪಸ್ಥಿತರಿದ್ದರು.