ಸಂಪುಟ ವಿಸ್ತರಣೆಗೆ ಕಸರತ್ತು: ಸಚಿವ ಸ್ಥಾನ ಆಕಾಂಕ್ಷಿಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ
![ಸಂಪುಟ ವಿಸ್ತರಣೆಗೆ ಕಸರತ್ತು: ಸಚಿವ ಸ್ಥಾನ ಆಕಾಂಕ್ಷಿಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಸಂಪುಟ ವಿಸ್ತರಣೆಗೆ ಕಸರತ್ತು: ಸಚಿವ ಸ್ಥಾನ ಆಕಾಂಕ್ಷಿಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ](https://www.varthabharati.in/sites/default/files/images/articles/2018/11/27/165266.jpg)
ಬೆಂಗಳೂರು, ನ. 27: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ಆರಂಭವಾಗಿರುವ ಬೆನ್ನಲ್ಲೆ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖಂಡರ ಮನೆಗಳಿಗೆ ಎಡತಾಕುತ್ತಿದ್ದಾರೆ.
ಮಂಗಳವಾರ ಬೆಳಗ್ಗೆ ಸಚಿವ ಸ್ಥಾನದ ಆಕಾಂಕ್ಷಿಗಳಾದ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಸುಧಾಕರ್, ಬಾಗೇಪಲ್ಲಿಯ ಶಾಸಕ ಸುಬ್ಬಾರೆಡ್ಡಿ ಹಾಗೂ ಹೊಸಕೋಟೆ ಕ್ಷೇತ್ರದ ಶಾಸಕ ಎಂಟಿಬಿ ನಾಗರಾಜ್ ಅವರು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಡಿ.10ರಂದು ಬೆಳಗಾವಿಯಲ್ಲಿ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿಎಂ ಕುಮಾರಸ್ವಾಮಿ ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆಕಾಂಕ್ಷಿಗಳು ಮುಖಂಡರನ್ನು ಭೇಟಿ ಮಾಡಿ ಚರ್ಚಿಸುತ್ತಿದ್ದಾರೆಂದು ಗೊತ್ತಾಗಿದೆ.
ಸಂಪುಟದಲ್ಲಿ ಖಾಲಿ ಇರುವ ಆರು ಸ್ಥಾನಗಳನ್ನು ಭರ್ತಿ ಮಾಡಬೇಕಿದ್ದು, ಕಾಂಗ್ರೆಸ್ ಪಕ್ಷದ ಶಾಸಕರು ಸಚಿವ ಸ್ಥಾನಕ್ಕಾಗಿ ವರಿಷ್ಠರ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ. ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಬಿ.ಸಿ.ಪಾಟೀಲ್, ಸುಧಾಕರ್, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ಶಾಸಕರ ಮಧ್ಯೆ ಪೈಪೋಟಿ ಆರಂಭವಾಗಿದೆ.