ಜನಾರ್ದನ ರೆಡ್ಡಿಯನ್ನು ಭೇಟಿ ಮಾಡಿದ ‘ಕೈ’ ಶಾಸಕ ಡಾ.ಸುಧಾಕರ್ ?
ಬೆಂಗಳೂರು, ಡಿ. 3: ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಅತೃಪ್ತ ಶಾಸಕರ ಒತ್ತಡ, ‘ಆಪರೇಷನ್ ಕಮಲ’ದ ಮಾತುಗಳು ಕೇಳಿಬರುತ್ತಿರುವುದರ ಮಧ್ಯೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಸುಧಾಕರ್, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರನ್ನು ಭೇಟಿ ಮಾಡಿ ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದ್ದಾರೆ.
ಸೋಮವಾರ ರಾತ್ರಿ ಇಲ್ಲಿನ ತುಮಕೂರು ರಸ್ತೆಯಲ್ಲಿನ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗಿರುವ ಗಾಲಿ ಜನಾರ್ದನ ರೆಡ್ಡಿಯವರನ್ನು ಭೇಟಿ ಮಾಡಿರುವ ಶಾಸಕ ಸುಧಾಕರ್, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆಂದು ಹೇಳಲಾಗಿದೆ.
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅತೃಪ್ತರಾಗಿರುವ ಡಾ.ಸುಧಾಕರ್, ಮೈತ್ರಿ ಸರಕಾರ ಹಾಗೂ ಪಕ್ಷದ ನಾಯಕರ ವಿರುದ್ಧವೇ ಬಹಿರಂಗ ವಾಗ್ದಾಳಿ ನಡೆಸಿದ್ದರು. ಈ ಮಧ್ಯೆಯೇ ಬಿಜೆಪಿಯ ಗಾಲಿ ಜನಾರ್ದನ ರೆಡ್ಡಿಯವರನ್ನು ಭೇಟಿ ಮಾಡಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಆದರೆ, ರೆಡ್ಡಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ವಿಚಾರಿಸಲು ಸುಧಾಕರ್ ತೆರಳಿದ್ದರು ಎಂದು ಹೇಳಲಾಗುತ್ತದೆ.