ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸ್ಥಾನಮಾನ: ದಿನೇಶ್ ಗುಂಡೂರಾವ್
![ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸ್ಥಾನಮಾನ: ದಿನೇಶ್ ಗುಂಡೂರಾವ್ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸ್ಥಾನಮಾನ: ದಿನೇಶ್ ಗುಂಡೂರಾವ್](https://www.varthabharati.in/sites/default/files/images/articles/2018/12/16/168261.jpeg)
ಬೆಂಗಳೂರು, ಡಿ.16: ಸಭಾಪತಿ ಸ್ಥಾನ ಯಾರಿಗೆ ಎನ್ನುವ ವಿಚಾರ ಸ್ಪಷ್ಟವಾಗಿರಲಿಲ್ಲ. ಆದರೆ ಈಗ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸ್ಥಾನಮಾನ ಕೊಟ್ಟು ನ್ಯಾಯ ಒದಗಿಸುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎನ್ನುವುದನ್ನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ರವಿವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೆ. ಅಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದ ಅವರು, ಸಚಿವ ಸಂಪುಟ ವಿಸ್ತರಣೆ ಖಚಿತ. ಡಿಸೆಂಬರ್ 22 ರಂದೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಮುಖಂಡರಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಕೆಲವರು ವಂದತಿ ಹಬ್ಬಿಸುತ್ತಿದ್ದಾರೆ ಎಂದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಸಭಾಪತಿ ಸ್ಥಾನ ಯಾರಿಗೆ ದೊರೆಯಲಿದೆ ಎನ್ನುವ ವಿಚಾರ ಸ್ಪಷ್ಟವಾಗಿರಲಿಲ್ಲ. ಸಭಾಪತಿ ಸ್ಥಾನ ವಿಚಾರದಲ್ಲಿ ಯಾರಿಗೂ ಆಶ್ವಾಸನೆ ಕೊಟ್ಟಿರಲಿಲ್ಲ. ಅದು ಪಕ್ಷದ ಆಂತರಿಕ ವಿಚಾರ. ಈಗ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸ್ಥಾನಮಾನ ಕೊಟ್ಟು ನ್ಯಾಯ ಒದಗಿಸುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎನ್ನುವುದನ್ನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದು ದಿನೇಶ್ ನುಡಿದರು.