ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಘೇಲ್ ಪ್ರಮಾಣ
![ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಘೇಲ್ ಪ್ರಮಾಣ ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಘೇಲ್ ಪ್ರಮಾಣ](https://www.varthabharati.in/sites/default/files/images/articles/2018/12/17/168375.jpg)
ರಾಯ್ಪುರ,ಡಿ.17: ಛತ್ತೀಸ್ಗಡದ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಗೆಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಹುದ್ದೆ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದ ಶಾಸಕರಾದ ಟಿ.ಎಸ್ ಸಿಂಗ್ ದಿಯೊ ಮತ್ತು ತಾಮ್ರಧ್ವಜ ಸಾಹು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತರ ಹಿಂದುಳಿದ ಜಾತಿ ಸಮುದಾಯಕ್ಕೆ ಸೇರಿರುವ ಬಗೆಲ್ ಛತ್ತೀಸ್ಗಡದ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ.
ರಾಯ್ಪುರದ ಬಲ್ಬೀರ್ ಜುನೆಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲೆ ಆನಂದಿಬೆನ್ ಪಟೇಲ್, 57ರ ಹರೆಯದ ಬಗೆಲ್ಗೆ ಪ್ರಮಾಣ ವಚನ ಮತ್ತು ಕಚೇರಿಯ ಗೌಪ್ಯತೆಯನ್ನು ಬೋಧಿಸಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜೊತೆಗೆ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಉಪಮುಖ್ಯಮಂತ್ರಿ ಸಚಿನ್ ಪೈಲಟ್, ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ, ಸಂಸದ ಜ್ಯೋತಿರಾಧಿತ್ಯ ಸಿಂಧಿಯಾ, ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು, ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಲೋಕತಾಂತ್ರಿಕ ಜನತಾದಳದ ನಾಯಕ ಶರದ್ ಯಾದವ್ ಉಪಸ್ಥಿತರಿದ್ದರು.