ಜಲ್ಲಿ ಕ್ರಷರ್ ಮಾಲಕರು ಪ್ರತಿಭಟನೆ ಹಿಂಪಡೆಯಲು ಸಚಿವರ ಮನವಿ
ಚಳಿಗಾಲದ ಅಧಿವೇಶನ

ಬೆಳಗಾವಿ, ಡಿ.17: ಜಲ್ಲಿ ಕ್ರಷರ್ ಗಳಿಗೆ ಸಂಬಂಧಿಸಿದಂತೆ ಉದ್ಭವಿಸಿರುವ ಸಮಸ್ಯೆಯನ್ನು ನಿಯಮಾನುಸಾರ ಬಗೆಹರಿಸಲು ಕ್ರಮಕೈಗೊಳ್ಳಲಾಗಿದ್ದು, ಕ್ರಷರ್ ಮಾಲಕರು ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿರುವುದಾಗಿ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ನಿಯಮ 69ರ ಅಡಿ ಚರ್ಚೆ ಆರಂಭಿಸಿದ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸದನದ ಇತರ ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿ ಅವರು, ಪ್ರತಿಭಟನಾ ನಿರತ ಕ್ರಷರ್ ಮಾಲಕರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿರುವುದಾಗಿ ಸದನಕ್ಕೆ ತಿಳಿಸಿದರು.
ಕ್ರಷರ್ ಗಳ ಮಾಲಕರು ಕೆಲವು ನಿಯಮಾವಳಿಗಳನ್ನು ಪಾಲಿಸಬೇಕಿದೆ. ಈ ನಿಟ್ಟಿನಲ್ಲಿ ಸದನದಲ್ಲಿ ನಡೆದಿರುವ ಚರ್ಚೆಗೆ ವರ್ಗಾವಾರು ಉತ್ತರ ನೀಡಬೇಕಿರುವುದರಿಂದ ಕಾಲಾವಕಾಶ ಅಗತ್ಯವಿದೆ. ಇದೇ ಬುಧವಾರ ಉತ್ತರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅವರು ಸದನಕ್ಕೆ ತಿಳಿಸಿದರು.
ತಿದ್ದುಪಡಿ ವಿಧೇಯಕ ಅಂಗೀಕಾರ: 2018ನೇ ಸಾಲಿನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಇಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಒಟ್ಟು ಆರು ಸದಸ್ಯರ ಪೈಕಿ ಒಬ್ಬ ಮಹಿಳಾ ಸದಸ್ಯರನ್ನು ನೇಮಿಸುವ ಸಂಬಂಧದ ತಿದ್ದುಪಡಿ ವಿಧೇಯಕ ಇದ್ದಾಗಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅವರು ವಿಧೇಯಕವನ್ನು ಸದನದಲ್ಲಿ ಮಂಡಿಸಿದರು.







