ಶಾಂತಿಭಂಗಕ್ಕೆ ಕಾರಣರಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಚಿಕ್ಕಮಗಳೂರು ಡಿಸಿ ಶ್ರೀರಂಗಯ್ಯ
ಸಂಘಪರಿವಾರದ ದತ್ತಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜು

ಚಿಕ್ಕಮಗಳೂರು, ಡಿ.17: ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಆಯೋಜಿಸಿರುವ ದತ್ತಜಯಂತಿ ಮತ್ತು ದತ್ತಮಾಲಾ ಅಭಿಯಾನ ಕಾರ್ಯಕ್ರಮಗಳ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಮತ್ತು ಪೋಲೀಸ್ ಇಲಾಖೆ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಶ್ರೀರಂಗಯ್ಯ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಉಪಸ್ಥಿತಿಯಲ್ಲಿ ಪೋಲೀಸ್ ವರಿಷ್ಠಾಧಿಕಾರಿಗಳು, ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸಮನ್ವಯ ಸಮಿತಿ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.
ದತ್ತಜಯಂತಿಯ ಸಂದರ್ಭದ 3 ದಿನಗಳ ಕಾಲ ಶಾಂತಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಸೂಕ್ಷ್ಮ ಪ್ರದೇಶಗಳಲ್ಲಿ ದಂಡಾಧಿಕಾರಿಗಳನ್ನು ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆಗಳು, ಘರ್ಷಣೆಗಳು ನಡೆಯುವ ಸಂದರ್ಭದಲ್ಲಿ ಸ್ಥಳೀಯ ಪರಿಸ್ಥಿತಿಗನುಗುಣವಾಗಿ ಕಟ್ಟುನಿಟ್ಟಿನ ಕಾನೂನುಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ದತ್ತಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತರಿಗೆ ನೀಡಲು 25 ಸಾವಿರ ಲಾಡು ಪ್ರಸಾದದ ಪ್ರಾಯೋಜಕತ್ವವನ್ನು ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯ, ಕಳಸದ ಕಳಸೇಶ್ವರ ದೇವಾಲಯಗಳು ವಹಿಸಿಕೊಂಡಿವೆ ಎಂದು ಮಾಹಿತಿ ನೀಡಿದ ಅವರು, ಭಾಗವಹಿಸುವ 25 ಸಾವಿರ ಮಂದಿಗೆ 7ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಡಿ.20ರಿಂದ 22ರವರೆಗೆ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ನಡೆಯಲಿರುವ ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.
ಶೋಭಾಯಾತ್ರೆ ಮತ್ತು ದತ್ತಜಯಂತಿ ಕಾರ್ಯಕ್ರಮಗಳ ದಿನಗಳಂದು ಬೇರೆ ಜಿಲ್ಲೆಗಳಿಂದ ಭಾಗವಹಿಸುವ ಭಕ್ತರಿಗೆ ಊಟ, ಉಪಾಹಾರಗಳ ಕೊರತೆಯಾಗದಂತೆ ಚಿಕ್ಕಮಗಳೂರು, ದತ್ತಪೀಠ, ಹೊನ್ನಮ್ಮಳ್ಳ ಮತ್ತು ಮೂಡಿಗೆರೆ ಮಾರ್ಗದ ಆಯ್ದ ಸ್ಥಳಗಳು ಮತ್ತು ವಾಹನ ಪಾರ್ಕಿಂಗ್ ಸ್ಥಳಗಳು, ಕೊಟ್ಟಿಗೆಹಾರಗಳಲ್ಲಿ ಕ್ಯಾಂಟಿನ್ ತೆರೆಯಲು ಅವಕಾಶ ನೀಡಲಾಗುವುದು ಎಂದ ಅವರು, ಕಾರ್ಯಕ್ರಮದ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚನಾ ಫಲಕಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಹೊನ್ನಮ್ಮಳ್ಳ ಪ್ರದೇಶದಲ್ಲಿ ಮಾಲಿನ್ಯ ತಡೆಗಟ್ಟಲು ದೊಡ್ಡ ಕಸದ ಡಬ್ಬಿಗಳನ್ನು ಇಡಲಾಗುವುದು ಎಂದು ಹೇಳಿದರು.
ಶಾಂತಿಭಂಗ ಉಂಟು ಮಾಡುವ ಯಾವುದೇ ವ್ಯಕ್ತಿಯನ್ನು ಪೊಲೀಸರು ಹಾಜರು ಪಡಿಸಿದಾಗ ಅವರಿಂದ ಮುಚ್ಚಳಿಕೆ ಮತ್ತು ಜಾಮೀನುಗಳನ್ನು ಪಡೆಯುವಂತೆ ದಂಡಾಧಿಕಾರಿಗಳಿಗೆ ಸೂಚಿಸಲಾಗಿದೆ. ಇವುಗಳನ್ನು ಕೊಡಲು ತಪ್ಪಿದಲ್ಲಿ ಇಂತಹವರನ್ನು ಜೈಲಿಗೆ ಕಳುಹಿಸುವ ಅಧಿಕಾರ ದಂಡಾಧಿಕಾರಿಗಳಿಗೆ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡದಂತೆ ಶಾಂತಿಯುತವಾಗಿ ಕಾರ್ಯಕ್ರಮ ನಡೆಸುವಂತೆ ಸಂಘಟನೆಗಳಿಗೆ ಜಿಲ್ಲಾಡಳಿತ ಮಾಡಿರುವ ಮನವಿಗೆ ಮುಖಂಡರು ಸ್ಪಂದಿಸಿದ್ದಾರೆ. ಜಿಲ್ಲಾದ್ಯಂತ ಜಿಲ್ಲಾಡಳಿತ ನೇಮಕಗೊಳಿಸಿರುವ ದಂಡಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
- ಎಂ.ಕೆ.ಶ್ರೀರಂಗಯ್ಯ, ಜಿಲ್ಲಾಧಿಕಾರಿ







