ಕರಾವಳಿ ಉತ್ಸವದ ಸಾಂಸ್ಕೃತಿಕ ಮೆರವಣಿಗೆಗೆ ವಿಧ್ಯುಕ್ತ ಚಾಲನೆ

ಮಂಗಳೂರು, ಡಿ. 21: ದ.ಕ. ಜಿಲ್ಲಾ ಕರಾವಳಿ ಉತ್ಸವದ ಸಾಂಸ್ಕೃತಿಕ ಮೆರವಣಿಗೆಗೆ ನಗರದ ನೆಹರೂ ಮೈದಾನದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಭಾಸ್ಕರ್ ಕೆ. ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕರಾವಳಿ ಜಿಲ್ಲೆಯ ಸಂಸ್ಕೃತಿ, ಪಾರಂಪರಿಕ ಕಟ್ಟಡಗಳನ್ನು ಉಳಿಸುವ ಸಲುವಾಗಿ ಹಾಗೂ ಹೊಸತನವನ್ನು ಅಳವಡಿಸಿ ಕೊಳ್ಳಲು ಉತ್ಸವಕ್ಕೆ ಚಾಲನೆ ನೀಡಲಾಗಿದೆ ಎಂದರು.
ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್., ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಜಿಪಂ ಸಿಇಒ ಡಾ. ಎಡಿಸಿ ಕುಮಾರ್, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಸೆಲ್ವಮಣಿ, ಮತ್ತು ಮೆರವಣಿಗೆ ಸಮಿತಿಯ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಹರಿಕೃಷ್ಣ ಪುನರೂರು ಮತ್ತಿತರರು ಉಪಸ್ಥಿತರಿದ್ದರು.
ನೆಹರೂ ಮೈದಾನದಿಂದ ಹೊರಟ ಮೆರವಣಿಗೆಯು ಎ.ಬಿ ಶೆಟ್ಟಿ ಸರ್ಕಲ್, ಗಡಿಯಾರ ಗೋಪುರ, ಯು.ಪಿ. ಮಲ್ಯ ರಸ್ತೆ, ಹಂಪನ್ ಕಟ್ಟೆ ವೃತ್ತ, ಕಾರ್ನಾಡ್ ಸದಾಶಿವ ರಾವ್ ರಸ್ತೆ (ಕೆ.ಎಸ್. ರಾವ್ ರೋಡ್), ಬಿಷಪ್ ಹೌಸ್, ಮಂಜೇಶ್ವರ ಗೋವಿಂದ ಪೈ ವೃತ್ತ (ನವಭಾರತ ಸರ್ಕಲ್), ಪಿ.ವಿ.ಎಸ್. ಜಂಕ್ಷನ್, ಮಹಾತ್ಮಾ ಗಾಂಧಿ ರಸ್ತೆ, ಬಳ್ಳಾಲ್ಬಾಗ್, ಲಾಲ್ಭಾಗ್ ಮೂಲಕ ಕರಾವಳಿ ಉತ್ಸವ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ.
ರಾಜ್ಯದ ಸುಮಾರು 80ಕ್ಕೂ ವಿವಿಧ ಕಲಾತಂಡಗಳ ಪ್ರದರ್ಶನಗಳು, ನೃತ್ಯಗಳು, ಚೆಂಡೆ, ಡೋಲು ವಿಶೇಷವಾಗಿ ಮಹಿಳಾ ವೀರಗಾಸೆ, ಚಿಕ್ಕಮಗಳೂರು, ಶಿವಮೊಗ್ಗದ ಡೊಳ್ಳು ಕುಣಿತ, ಸಾಗರದ ಕೋಲಾಟ, ಹಾವೇರಿಯ ಪುರವಂತಿಕೆ, ಧಾರವಾಡದ ಜಗ್ಗಲಿಗೆ ಮೇಳ, ಮಾಗಡಿಯ ಪಟ್ಟದ ಕುಣಿತ, ತುಮಕೂರಿನ ಸೋಮನ ಕುಣಿತ, ರಾಮನಗರದ ಪೂಜಾ ಕುಣಿತ, ಮೈಸೂರಿನ ವೀರಭದ್ರ ಕುಣಿತ, ಹಾವೇರಿಯ ಬೇಡರ ಕುಣಿತ, ಕಾರವಾರದ ಸುಗ್ಗಿ ಕುಣಿತ, ಮೈಸೂರಿನ ಕಂಸಾಳೆ, ನಗಾರಿ ತಂಡ, ರಾಯಚೂರಿನ ಕಣಿವಾದನ, ಚಾಮರಾಜನಗರದ ಗೊರವರ ಕುಣಿತ, ಬೆಳಗಾವಿಯ ಲಂಬಾಣಿ ನೃತ್ಯ, ಹಾಸನದ ಚಿಟ್ಟಿಮೇಳ, ಬದಿಯಡ್ಕದ ತ್ರಯಂಬಕಂ, ಕಾಸರಗೋಡಿನ ದುಡಿ ಇನದನ, ಮಾರ್ಗಂಕಳಿ, ತಿರುವಾದಿರೆಕ್ಕಳಿ, ಮಡಿಕೇರಿಯ ಕೊಡವ ನೃತ್ಯ ತಂಡಗಳಲ್ಲದೆ ಕನ್ನಡ ಭುವನೇಶ್ವರಿಯ ಟ್ಯಾಬ್ಲೊ, ತುಳುನಾಡಿನ ಜನಪದ ಕುಣಿತ, ಯಕ್ಷಗಾನ ವೇಷಗಳು, ಸೋಣ ಜೋಗಿ ಕುಣಿತ ಹುಲಿವೇಷ, ತಾಲೀಮು, ಶಂಖ ದಾಸರು,ಜಾನಪದ ಗೊಂಬೆ, ಕೊರಗರ ಗಜಮೇಳ, ಮರಕಾಲು ಹುಲಿ ವೇಷ, ದಪ್ಪುಕುಣಿತ, ಕಂಗೀಲು ನೃತ್ಯ ಇತ್ಯಾದಿ ತಂಡಗಳು ಭಾಗವಹಿಸುತ್ತಿವೆ. ಬೆಡಿ ಗರ್ನಲ್ ಸಹಿತವಾಗಿ ವಿವಿಧ ದೇವಸ್ಥಾನಗಳಿಂದ ಸಾಂಪ್ರದಾಯಿಕ ವಾದನದೊಂದಿಗೆ ತಟ್ಟೀರಾಯ, ಬೇತಾಳ ಮೆರವಣಿಗೆಗೆ ಮೆರುಗು ನೀಡಿದವು.
ಅನೇಕ ವಿದ್ಯಾ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು, ಎನ್ಸಿಸಿ, ಸ್ಕೌಟ್ಸ್ ಗೈಡ್ಸ್ ಭಾರತ ಸೇವಾದಲ, ಬ್ಯಾಂಕ್, ಅಂಚೆ ಇತ್ಯಾದಿ ಸಂಸ್ಥೆಗಳೂ ಪಾಲ್ಗೊಂಡವು. ಕಾಲೇಜು ವಿದ್ಯಾರ್ಥಿಗಳನ್ನೊಳಗೊಂಡಂತೆ ಐದು ಸಾವಿರ ವಿದ್ಯಾರ್ಥಿಗಳು ವಿವಿಧ ಸಾಮಾಜಿಕ ಚಿಂತನೆಗಳ ಅಭಿವ್ಯಕ್ತ ಪ್ರದರ್ಶನದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು.