ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಯುವಕನಿಗೆ 14 ವರ್ಷ ಜೈಲು ಶಿಕ್ಷೆ
![ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಯುವಕನಿಗೆ 14 ವರ್ಷ ಜೈಲು ಶಿಕ್ಷೆ ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಯುವಕನಿಗೆ 14 ವರ್ಷ ಜೈಲು ಶಿಕ್ಷೆ](https://www.varthabharati.in/sites/default/files/images/articles/2018/12/21/169055.jpg)
ಬೆಂಗಳೂರು, ಡಿ.21: ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಪ್ರಕರಣ ಸಂಬಂಧ ಆರೋಪಿ ಸಂತೋಷ್ ಎಂಬಾತನಿಗೆ 14 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 70ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು 71 ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ.
ಸುವರ್ಣನಗರ ದೊಡ್ಡಬಿದರಕಲ್ಲು ನಾಗಸಂದ್ರದಲ್ಲಿ 2014ನೆ ಸಾಲಿನ ಮಾರ್ಚ್ ತಿಂಗಳಿನಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಸಂತೋಷ್(29) ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಸಂಬಂಧ ಯಶವಂತಪುರ ಉಪವಿಭಾಗದ ಎಸಿಪಿ ರವಿಪ್ರಸಾದ್ ಆರೋಪಿ ಸಂತೋಷ್ ಅನ್ನು ಬಂಧಿಸಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿಯ ಮೇಲೆ ನಗರದ 70ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು 71 ನೆ ಸಿಸಿಹೆಚ್ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಸರಕಾರಿ ಅಭಿಯೋಜಕಿ ಕೆ.ಜೆ. ಮೀನಾಕುಮಾರಿ ಅವರು ವಾದ ಮಂಡಿಸಿದ್ದರು. ವಾದವನ್ನು ಆಲಿಸಿದ ನ್ಯಾಯಾಲಯವು ಆರೋಪಿಗೆ 14 ವರ್ಷ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ ಆದೇಶಿಸಿದೆ ಎಂದು ಪ್ರಕಟನೆ ತಿಳಿಸಿದೆ.