ನರಿಕೊಂಬು ಗ್ರಾಪಂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ನವಜೀವನ ಅಂಗನವಾಡಿ ಕೇಂದ್ರದ ಉದ್ಘಾಟನೆ

ಬಂಟ್ವಾಳ, ಡಿ. 24: ಅಂಗನವಾಡಿ ಕೇಂದ್ರಗಳನ್ನು ಸುಸಜ್ಜಿತಗೊಳಿಸುವ ನಿಟ್ಟಿನಲ್ಲಿ ಹವಾನಿಯಂತ್ರಕ ವ್ಯವಸ್ಥೆಗಳನ್ನು ಅಳವಡಿಕೊಳ್ಳುತ್ತಿರುವ ಉತ್ತಮ. ಆದರೆ, ಸಣ್ಣ ಮಕ್ಕಳನ್ನು ನೈಸರ್ಗಿಕ ವಾತವರವಣದಲ್ಲಿ ಬೆಳೆಯುವ ಅವಕಾಶ ಕಲ್ಪಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ನರಿಕೊಂಬು ಗ್ರಾಮ ಪಂಚಾಯತ್ನ ಆಶ್ರಯದಲ್ಲಿ ನಡೆದ ನವಜೀವನ ಅಂಗನವಾಡಿ ಕೇಂದ್ರದ ಉದ್ಘಾಟನೆ ಹಾಗೂ ಗ್ರಾಮಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ತನ್ನ ಕ್ಷೇತ್ರವ್ಯಾಪ್ತಿಯಲ್ಲಿ ಇಂತಹ ಸುಸಜ್ಜಿತ ಅಂಗನವಾಡಿ ಕೇಂದ್ರ ಇರುವುದು ನನಗೆ ಹೆಮ್ಮೆ ಎಂದು ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಎಸಿ ಅಳವಾಡಿಬಾರದೆನ್ನುವ ಸರಕಾರದ ನಿಯಮವಿದೆ. ಆದ್ದರಿಂದ ಸಾಕಷ್ಟು ನೈಸರ್ಗಿಕ ವಾತವರಣದಲ್ಲಿಯೇ ಮಕ್ಕಳ ಕಲಿಕೆ ಅವಕಾಶ ಮಾಡಿಕೊಟ್ಟು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಎಸಿ ಬಳಸುವಂತೆ ಕಿವಿ ಮಾತು ನೀಡಿದರು. ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಮೆಸ್ಕಾಂ ಇಂಜಿನಿಯರ್ ನಾರಾಯಣ ಭಟ್, ನರಿಕೊಂಬು ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪಿಡಿಒ ಶಿವಾನಂದ ಪೂಜಾರಿ, ಲಕ್ಷ್ಮಣ ಸಪಲ್ಯ, ಶೈಲೇಶ್, ರವೀಂದ್ರ ಸಪಲ್ಯ ಅವರನ್ನು ಸನ್ಮಾನಿಸಲಾಯಿತು.
ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಯಶೋಧರ ಕರ್ಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿಪಂಜ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸುಂದರ ಪೂಜಾರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಶೀಲ್ದಾರ್ ಪುರಂದರ ಹೆಗ್ಡೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾ, ರಾಜಾ ಬಂಟ್ವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಾಲವಿಕಾಸ ಸಮಿತಿ ಅಧ್ಯಕ್ಷ ರವೀಂದ್ರ ಸಪಲ್ಯ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಶಿವಾನಂದ ಪೂಜಾರಿ ಪ್ರಾಸ್ತಾವಿಸಿದರು. ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.